ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಮೋಡ ಬಿತ್ತನೆ ಯೋಜನೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಲಾಗಿದೆ.
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೋಡ ಬಿತ್ತನೆಗಾಗಿ ವಿಶೇಷವಾಗಿ ಸಿದ್ಧಪಡಿಸಲಾಗಿರುವ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಹಾಗೂ ನಾಡಧ್ವಜ ಪ್ರದರ್ಶಿಸುವ ಮೂಲಕ ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ ಅವರು, ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಮುಂಗಾರು ಮಳೆಗಾಲ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮುನ್ನ ಅಗತ್ಯ ಪ್ರಮಾಣದ ಕುಡಿಯುವ ನೀರನ್ನು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಮುಂದಿನ ಜೂನ್ವರೆಗೂ ತೀವ್ರ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಎದುರಾಗಬಹುದಾದ ನೀರಿನ ಕೊರತೆಯನ್ನು ತಗ್ಗಿಸುವುದರ ಜೊತೆಗೆ ರೈತರ ಹಿತ ಕಾಪಾಡುವ ಉದ್ದೇಶದಿಂದ ಮೋಡ ಬಿತ್ತನೆ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಹಿಂದೆ ರಾಜ್ಯದಲ್ಲಿ ನಡೆದಿದ್ದ ಮೋಡ ಬಿತ್ತನೆ ಕಾರ್ಯಾಚರಣೆ ಶೇ.35ರಷ್ಟು ಯಶಸ್ವಿಯಾಗಿತ್ತು. ಈ ಬಾರಿ ಕೈಗೊಂಡಿರುವ ಯೋಜನೆಯಿಂದ ರಾಜ್ಯದ ಜನರಿಗೆ ಅನುಕೂಲವಾಗಬೇಕು ಎಂಬುದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಮೋಡ ಬಿತ್ತನೆ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವ ಬಗ್ಗೆ ಚಿಂತಿಸುವುದಿಲ್ಲ. ನಾಡಿನ ಹಿತ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದರು.
28.52 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಈ ಯೋಜನೆಯ ಮೂಲಕ ಮಳೆ ಕೊರತೆಯಿರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಿ ಮಳೆಯ ಪ್ರಮಾಣ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್, ಶಾಸಕರಾದ ಎಚ್.ಕೆ. ಪಾಟೀಲ್, ಪ್ರಕಾಶ್ ಕೋಳಿವಾಡ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಹಲವರು ಉಪಸ್ಥಿತರಿದ್ದರು.