ವಿಜಯನಗರ: ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದರೆ ಸ್ಥಳದಲ್ಲೇ ಪರಿಹಾರ ನೀಡುವ ಅಥವಾ ನಿಗದಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವ ಉದ್ದೇಶದ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಈ ನಾಗರಿಕ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸುವ ಸಮಗ್ರ ವ್ಯವಸ್ಥೆಯೇ ‘ಪ್ರಜಾಸೇವಾ ಅಭಿಯಾನ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ರಚಿಸಲಾಗಿದ್ದು, ಅದರ ಮುಂದುವರಿದ ಭಾಗವಾಗಿ ಈ ಅಭಿಯಾನವನ್ನು ಆರಂಭಿಸಲಾಗಿದೆ.
ಪ್ರತಿ ಶನಿವಾರ ಜನರೊಂದಿಗೆ ಸಭೆ
ರಾಜ್ಯದಾದ್ಯಂತ ಪ್ರತಿ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸರದಿ ಆಧಾರದ ಮೇಲೆ ‘ಪ್ರಜಾಸೇವಾ ಅಭಿಯಾನ’ ಸಭೆಗಳನ್ನು ನಡೆಸಲಾಗುತ್ತದೆ.
ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಕೇಂದ್ರಗಳಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಅದೇ ರೀತಿ ಎರಡನೇ ಮತ್ತು ನಾಲ್ಕನೇ ಶನಿವಾರ ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ನಡೆಯಲಿದ್ದು, ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸರ್ಕಾರ ಈ ಹಿಂದೆ ತಿಳಿಸಿತ್ತು.
15 ದಿನ ಮೊದಲೇ ಜನರಿಗೆ ಮಾಹಿತಿ
ಸಭೆಯ ಕುರಿತು ಜನರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ ಮನೆಗೆ ಕರಪತ್ರಗಳನ್ನು ವಿತರಿಸುವ ಮೂಲಕ ಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಬಗ್ಗೆ ತಿಳಿಸಲಾಗುತ್ತದೆ.
ಇದರ ಜೊತೆಗೆ ತಾಲೂಕು ಅಥವಾ ಹೋಬಳಿ ವ್ಯಾಪ್ತಿಯ ನಿವಾಸಿಗಳಿಗೆ AI ಆಧಾರಿತ ಕಾಲ್ ಸೆಂಟರ್ನಿಂದ ಕರೆ ಮಾಡಿ ಸಭೆಯ ದಿನಾಂಕ, ಸಮಯ, ಸ್ಥಳ ಹಾಗೂ ಸಭೆಯ ಅಧ್ಯಕ್ಷತೆ ವಹಿಸುವ ಚುನಾಯಿತ ಪ್ರತಿನಿಧಿಯ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು ಒದಗಿಸುವ ಸೇವೆಗಳು ಮತ್ತು ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಜನರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಅಡಿಯಲ್ಲಿ ಸಮಗ್ರ ಸಾರ್ವಜನಿಕ ಕುಂದುಕೊರತೆ ಪರಿಹಾರ ವ್ಯವಸ್ಥೆ (IPGRS) ಅಭಿವೃದ್ಧಿಪಡಿಸಲಾಗಿದೆ.
ಇದು ಸಾರ್ವಜನಿಕರ ದೂರುಗಳನ್ನು ಪರಿಹರಿಸಲು ರೂಪಿಸಿರುವ ಬಹುಮುಖ, ದತ್ತಾಂಶ ಆಧಾರಿತ ಹಾಗೂ ಕಾಗದ ರಹಿತ ಸಾಫ್ಟ್ವೇರ್ ವ್ಯವಸ್ಥೆ ಎಂದು ಸರ್ಕಾರ ತಿಳಿಸಿದೆ.
1902ಕ್ಕೆ ಕರೆ ಮಾಡಿ ದೂರು ನೀಡಿ
ಜನರು ತಮ್ಮ ಸಮಸ್ಯೆ ಹಾಗೂ ದೂರುಗಳನ್ನು 1902 ಸಹಾಯವಾಣಿಗೆ ಕರೆ ಮಾಡುವ ಮೂಲಕ ಅಥವಾ ipgrs.karnataka.gov.in ಮೂಲಕ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರು ದಾಖಲಿಸಿದ ಬಳಿಕ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ರವಾನಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ವ್ಯವಸ್ಥೆಯನ್ನು ಈ ಅಭಿಯಾನದಡಿ ರೂಪಿಸಲಾಗಿದೆ.