ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ಈ ವೇಳೆ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ರಮ್ಯಾ ಅವರ ಬಳಿ ಕಣ್ಣೀರಿಟ್ಟು ಕ್ಷಮೆ ಯಾಚಿಸಿ, ಪ್ರಕರಣವನ್ನು ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ, ರಮ್ಯಾ ಅವರು ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡದೆ, ಆರೋಪಿಗಳನ್ನು ಕ್ಷಮಿಸಲು ನಿರಾಕರಿಸಿದ್ದಾರೆ.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಲಾಗಿರುವ ಆರೋಪಿಗಳು ನ್ಯಾಯಾಲಯದ ಆವರಣದಲ್ಲಿ ರಮ್ಯಾ ಅವರ ಕಾಲಿಗೆ ಬಿದ್ದು, “ಇದೊಂದು ಬಾರಿ ಕ್ಷಮಿಸಿ, ನಮ್ಮಿಂದ ದೊಡ್ಡ ತಪ್ಪಾಗಿದೆ” ಎಂದು ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಹಿಂದಿನ ವಿಚಾರಣೆಯ ಸಂದರ್ಭದಲ್ಲಿಯೂ ಆರೋಪಿಗಳು ಪ್ರಕರಣವನ್ನು ಹಿಂಪಡೆಯುವಂತೆ ರಮ್ಯಾ ಅವರಲ್ಲಿ ಮನವಿ ಮಾಡಿದ್ದರು. ಇದೀಗ ಆರೋಪಿಗಳ ಕುಟುಂಬಸ್ಥರೂ ನ್ಯಾಯಾಲಯಕ್ಕೆ ಆಗಮಿಸಿ, ಪ್ರಕರಣವನ್ನು ಇಲ್ಲಿಗೇ ಮುಕ್ತಾಯಗೊಳಿಸುವಂತೆ ಮನವಿ ಮಾಡಿದ್ದಾರೆ.
ಆದರೆ, ಆರೋಪಿಗಳ ಕ್ಷಮಾಪಣೆಯನ್ನು ತಿರಸ್ಕರಿಸಿರುವ ರಮ್ಯಾ, ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಕೈಯಲ್ಲಿ ಮೊಬೈಲ್ ಇದೆ, ಇಂಟರ್ನೆಟ್ ಸಿಗುತ್ತದೆ ಎಂಬ ಕಾರಣಕ್ಕೆ ಯಾರ ವಿರುದ್ಧ ಬೇಕಾದರೂ ಅಶ್ಲೀಲವಾಗಿ ಕಾಮೆಂಟ್ ಮಾಡಬಹುದೇ? ನಾನು ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಹಿಂಪಡೆಯುವುದಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆಂದು ತಿಳಿದುಬಂದಿದೆ.
ಇದೇ ವೇಳೆ ಸಾಮಾಜಿಕ ಜಾಲತಾಣದ ಟ್ರೋಲ್ ಹಾಗೂ ಸೈಬರ್ ದೌರ್ಜನ್ಯದ ವಿರುದ್ಧ ತಮ್ಮ ಕಾನೂನು ಹೋರಾಟ ಮುಂದುವರಿಸುವುದಾಗಿ ರಮ್ಯಾ ತಿಳಿಸಿದ್ದಾರೆ.
ನ್ಯಾಯಾಲಯ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ಹಾಜರಾಗಲು ಸಿದ್ಧವಿದ್ದೇನೆ. ಆದರೆ, ಆರೋಪಿಗಳಿಗೆ ಕ್ಷಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
“ಈ ಘಟನೆ ಎಲ್ಲರಿಗೂ ಒಂದು ಪಾಠವಾಗಬೇಕು. ಮುಂದೆ ಮತ್ತೊಬ್ಬ ಮಹಿಳೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು” ಎಂದು ರಮ್ಯಾ ತಿಳಿಸಿದ್ದಾರೆಂದು ತಿಳಿದುಬಂದಿದೆ.
ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ ಹಾಗೂ ಅವಾಚ್ಯ ಪದಗಳನ್ನು ಬಳಸಿ ಸಂದೇಶಗಳನ್ನು ಕಳುಹಿಸಲಾಗಿತ್ತು.
ಈ ಸಂಬಂಧ ಅವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ತನಿಖೆ ನಡೆಸಿ, ನಿಂದನಾತ್ಮಕ ಸಂದೇಶಗಳನ್ನು ಕಳುಹಿಸಿದ್ದ ಹಲವು ಆರೋಪಿಗಳನ್ನು ಬಂಧಿಸಿದ್ದರು.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ವಿಚಾರಣೆ ಮುಂದುವರಿದಿದೆ.