ಬೆಂಗಳೂರು:"ಬರದ ಸಂಕಷ್ಟದಲ್ಲಿರುವ ರೈತರೊಂದಿಗೆ ಸರ್ಕಾರವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭರವಸೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರೈತರ ಜಮೀನುಗಳಿಗೆ ತೆರಳಿ, ಅನ್ನದಾತರ ಸಮಸ್ಯೆಗಳನ್ನು ಆಲಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದು, ನಿಮ್ಮೊಂದಿಗೆ ಸರ್ಕಾರವಿದೆ ಎಂದು ಧೈರ್ಯ ತುಂಬಿರುವುದಾಗಿ ತಿಳಿಸಿದ್ದಾರೆ.
ರೈತ ಉಳಿದರೆ ನಾಡು ಉಳಿಯುತ್ತದೆ. ಮಳೆ ಕೈಕೊಟ್ಟರೂ ರೈತನ ಕೈಬಿಡದ ಸರ್ಕಾರ, ಬೆಳೆ ಉಳಿಸಲು ₹28.52 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದೆ. ನಷ್ಟಕ್ಕೊಳಗಾದ ರೈತರಿಗೆ ವಿಮಾ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಲು ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದಿದ್ದಾರೆ.
ಬರಪೀಡಿತ ಪ್ರದೇಶದ ರೈತರ ಸಾಲ ವಸೂಲಿಗೆ ತಡೆ, ತ್ವರಿತ ವಿಮಾ ಪರಿಹಾರ, ಗ್ರಾಮೀಣ ಕೃಷಿ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ಬೆಳೆ ಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ತುರ್ತು ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಕಷ್ಟದ ಪ್ರತಿಯೊಂದು ಹೆಜ್ಜೆಯಲ್ಲೂ ಸರ್ಕಾರ ಅನ್ನದಾತನ ಬೆನ್ನಿಗೆ ನಿಲ್ಲಲಿದ್ದು, ರೈತರು ಯಾವುದೇ ಕಾರಣಕ್ಕೂ ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.