ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಭಾಗದ ವಿರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಶೇ. 7.5 ರಷ್ಟು ಮತ್ತು ಮೀಸಲಾತಿ ನೀಡಲು ನಿರ್ಧರಿಸಿದ್ದು, ಈ ಸಂಬಂಧ ಸೋಮವಾರ ಕರಡು ನಿಯಮ ಪ್ರಕಟಿಸಿದೆ.
ಈ ಪ್ರಸ್ತಾವನೆಯು ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ ನಿಯಮಗಳು, 2006ರ ಕರಡು ತಿದ್ದುಪಡಿಗಳ ಭಾಗವಾಗಿದೆ.
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದ್ದು, ಕರಡು ನಿಯಮಕ್ಕೆ ಆಕ್ಷೇಪಣೆ ಮತ್ತು ಸಲಹೆಗಳನ್ನ ಆಹ್ವಾನಿಸಿದೆ.
ಪ್ರಸ್ತಾವಿತ ತಿದ್ದುಪಡಿಯಡಿಯಲ್ಲಿ, ಪ್ರಸ್ತುತ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ ಶೇ. 15 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಇದರಲ್ಲಿ ಇನ್ನುಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯಾವುದೇ (ಖಾಸಗಿ ಸೇರಿದಂತೆ) ಶಿಕ್ಷಣ ಸಂಸ್ಥೆಗಳು/ಶಾಲೆಗಳಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡ 7.5 ರಷ್ಟು ಮೀಸಲಾತಿ ನೀಡಲಾಗುತ್ತದೆ.
ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳಿಗೆ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ಎಂದು ಕರೆಯಲ್ಪಡುವ ಪ್ರಸ್ತಾವಿತ ನಿಯಮಗಳು ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರುತ್ತವೆ ಎಂದು ತಿಳಿಸಲಾಗಿದೆ.