ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆಯ ಬೆನ್ನಲ್ಲೇ, ಉನ್ನತ ಶಿಕ್ಷಣ ಇಲಾಖೆಯು ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಶೇ. 15ರಷ್ಟು ಇರುವ ಗ್ರಾಮೀಣ ಕೋಟಾವನ್ನು ತಲಾ ಶೇ. 7.5 ರಂತೆ ಎರಡು ಭಾಗಗಳಾಗಿ ವಿಭಜಿಸಿ ಕರಡು ನಿಯಮಗಳ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಮೊನ್ನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ, ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಶೇಕಡಾ 7.5 ರಷ್ಟು ಮೀಸಲಾತಿ ನೀದುವುದಾಗಿ ಘೋಷಿಸಿದ್ದರು. ಇದರ ಬೆನಲ್ಲೇ, ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ನಿಯಮಗಳು, 2006ರ ನಿಯಮ 9ಕ್ಕೆ ತಿದ್ದುಪಡಿ ತರಲು ಈ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ, ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಪ್ರಮುಖ ವೃತ್ತಿಪರ ಉನ್ನತ ಶಿಕ್ಷಣ ಕೋರ್ಸ್ಗಳ ಸರ್ಕಾರಿ ಸೀಟುಗಳ ಪ್ರವೇಶಾತಿಗೆ ಅನ್ವಯವಾಗುವಂತೆ, ಉನ್ನತ ಶಿಕ್ಷಣ ಇಲಾಖೆಯು ಸದ್ಯ ಚಾಲ್ತಿಯಲ್ಲಿರುವ ಒಟ್ಟು ಶೇ. 15ರಷ್ಟು ಗ್ರಾಮೀಣ ಮೀಸಲಾತಿಯನ್ನು ಸಮಾನವಾಗಿ ಎರಡು ಭಾಗಗಳಾಗಿ ಹಂಚಿಕೆ ಮಾಡಿ ಕರಡು ನಿಯಮಗಳ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಅವು,
ಶೇ. 7.5 ರಷ್ಟು ಒಳಮೀಸಲಾತಿ (ಸರ್ಕಾರಿ ಶಾಲೆಗಳು): ಕರ್ನಾಟಕದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಓದಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಲಭ್ಯವಿರಲಿದೆ.
ಇನ್ನುಳಿದ ಶೇ. 7.5 ರಷ್ಟು ಮೀಸಲಾತಿ (ಇತರ ಸಂಸ್ಥೆಗಳು): ಗ್ರಾಮೀಣ ಪ್ರದೇಶದಲ್ಲಿರುವ ಇತರ ಯಾವುದೇ ಮಾನ್ಯತೆ ಪಡೆದ (ಖಾಸಗಿ ಹಾಗೂ ಅನುದಾನಿತ ಸೇರಿದಂತೆ) ಶೈಕ್ಷಣಿಕ ಸಂಸ್ಥೆಗಳು ಅಥವಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಸಿಗಲಿದೆ.
ಮುಂದುವರೆದು, ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು (ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001) ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನಿಯಮಗಳು ಅಧಿಕೃತವಾಗಿ ರಾಜ್ಯ ಗೆಜೆಟ್ನಲ್ಲಿ ಪ್ರಕಟಗೊಂಡು ಜಾರಿಗೆ ಬರಲಿವೆ.
ಒಟ್ಟಾರೆಯಾಗಿ, ಖಾಸಗಿ ಶಾಲೆಗಳ ಪೈಪೋಟಿಯಿಂದಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಸೀಟು ಸಿಗುವುದು ಕಷ್ಟವಾಗುತ್ತಿತ್ತು. ಈ ಹೊಸ ನಿಯಮದಿಂದಾಗಿ ಹಳ್ಳಿಗಳ ಸರ್ಕಾರಿ ಶಾಲಾ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಬಲ ಸಿಕ್ಕಂತಾಗಿದೆ.