ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾತಾವರಣ ಸಂಪೂರ್ಣ ಬದಲಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಹಾಗೂ ತಂಪಾದ ಹವಾಮಾನದಿಂದ ಕೂಡಿರಬೇಕಾದ ಬೆಂಗಳೂರಿನಲ್ಲಿ ಈ ಬಾರಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ.
ತಾಪಮಾನ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳು ಏಪ್ರಿಲ್ನಂತೆ ಭಾಸವಾಗುತ್ತಿದೆ. ಕಳೆದೆರಡು ದಿನಗಳಿಂದ ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಬಿಸಿಲಿನ ಬೇಗೆಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ನ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಸೆಪ್ಟೆಂಬರ್ನಲ್ಲಿ ನಗರದ ಸಾಮಾನ್ಯ ಗರಿಷ್ಠ ತಾಪಮಾನ ಸುಮಾರು 28 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, ಸೋಮವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಭಾನುವಾರ 32.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ 33.4 ಡಿಗ್ರಿ ಹಾಗೂ ಭಾನುವಾರ 33.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದರ ನಡುವೆ ಮುಂದಿನ ಕೆಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಉಷ್ಣಾಂಶದ ಜೊತೆಗೆ ಅತಿ ಹೆಚ್ಚು ನೇರಳಾತೀತ (ಯುವಿ) ಕಿರಣಗಳ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಐಎಂಡಿ ಬೆಂಗಳೂರಿನ ಉಸ್ತುವಾರಿ ನಿರ್ದೇಶಕ ಎನ್. ಪುವಿಯರಸನ್ ಮಾತನಾಡಿ, “ಸೆಪ್ಟೆಂಬರ್ನ ತಾಪಮಾನದಿಂದ ಈ ತಿಂಗಳು ಬೇಸಿಗೆ ಉತ್ತುಂಗದಲ್ಲಿರುವ ಏಪ್ರಿಲ್ನಂತಾಗಿದೆ. ಮುಂಗಾರು ದುರ್ಬಲವಾಗಿರುವುದು ತಾಪಮಾನ ಏರಿಕೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.
ನೆರೆಯ ಆಂಧ್ರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದ್ದರೂ, ಕರ್ನಾಟಕದಲ್ಲೂ ಹೆಚ್ಚಿನ ತಾಪಮಾನ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ಯುವಿ ಕಿರಣಗಳ ಎಚ್ಚರಿಕೆ ಕುರಿತು ಮಾತನಾಡಿರುವ ಪುವಿಯರಸನ್ ಅವರು, ಬಿಸಿ ವಾತಾವರಣಕ್ಕೂ ಕಿರಣಗಳಿಗೂ ನೇರ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಸಮುದ್ರಮಟ್ಟದಿಂದ ಸುಮಾರು 3,000 ಅಡಿ ಎತ್ತರದಲ್ಲಿದ್ದು, ಮೋಡ ಹಾಗೂ ವಾತಾವರಣದಲ್ಲಿನ ನೀರಾವಿ ಪ್ರಮಾಣ ಕಡಿಮೆ ಇರುವುದರಿಂದ ಸೌರ ಕಿರಣಗಳು ಹಾಗೂ ತೇವಾಂಶದ ಆವಿಯಾಗುವಿಕೆ ಹೆಚ್ಚಾಗಿದೆ. ಇದರಿಂದ ರಾಜಧಾನಿಯಲ್ಲಿ ಬಿಸಿಯ ಅನುಭವ ಹೆಚ್ಚಾಗಿದೆ ಎಂದು ವಿವರಿಸಿದ್ದಾರೆ.
ಐಎಂಡಿ ಅಂಕಿಅಂಶಗಳ ಪ್ರಕಾರ, ಸೋಮವಾರ ರಾಜ್ಯದ ಹಲವು ಪ್ರದೇಶಗಳಲ್ಲೂ ಗರಿಷ್ಠ ತಾಪಮಾನ ಸುಮಾರು 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಾರವಾರ, ಹೊನ್ನಾವರ, ಧಾರವಾಡ, ಗದಗ, ಶಿವಮೊಗ್ಗ, ಚಿತ್ರದುರ್ಗ ಹಾಗೂ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದೇ ಮಟ್ಟದ ತಾಪಮಾನ ದಾಖಲಾಗಿದೆ. ಮೈಸೂರು 34.2 ಡಿಗ್ರಿ ಸೆಲ್ಸಿಯಸ್ ಹಾಗೂ ಬಾಗಲಕೋಟೆ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಿಸಿವೆ.