ಹಾಸನ: ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಹರಳಹಳ್ಳಿ ಗ್ರಾಮದ ಮಣಿ ಅಲಿಯಾಸ್ ಮಣಿಕಂಠ ಎಂದು ಗುರುತಿಸಲಾಗಿದೆ.
ಮಣಿಕಂಠ ನಗರದ 80 ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದನು. ತಮ್ಮದೇ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಚನ್ನಪಟ್ಟಣ ವೃತ್ತದ ಸಮೀಪ ದುಷರ್ಮಿಯೊಬ್ಬ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾನೆ. ಹಲ್ಲೆ ವೇಳೆ ತಲೆಯ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದು ಈ ದೃಶ್ಯ ಭೀಕರವಾಗಿದೆ.
ಹಾಡಹಗಲೇ ರಾಷ್ಟ್ರೀಯ ಹೆದ್ದಾರಿಯಲ್ಲೇ ನಡೆದ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.