ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ED ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ
ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. 18 ಅನಧಿಕೃತ ಲೈಸೆನ್ಸ್ ಕೊಡುವುದಕ್ಕೆ ಸತೀಶ್ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಕೇಳಿ ಬಂದಿದೆ.
ಇಂದು ಬೆಳಿಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡವು ಸಚಿವರ ಮನೆಯೊಳಗೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹವಾಲಾ ಹಣಕಾಸು ವ್ಯವಹಾರದ ಲಿಂಕ್ ಆಧಾರದ ಮೇಲೆ ಈ ಶೋಧ ನಡೆಸಲಾಗುತ್ತಿದೆ.
ಮನೆಯಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ತೀವ್ರ ತನಿಖೆಗೆ ಒಳಪಡಿಸಲಾಗುತ್ತಿದ್ದು, ಪ್ರಮುಖ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್ ಲೈಸೆನ್ಸ್ ನೀಡಿದ್ದರು ಎನ್ನಲಾಗಿದೆ. ಬಾರ್ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿ ಶಾಕ್ ನೀಡಿದ್ದರು.
ಬೆಳಗಿನ ಜಾವ 4 ಗಂಟೆಯಿಂದಲೇ ಪ್ಲಾನ್ ಮಾಡಿಕೊಂಡಿದ್ದ ಇಡಿ ಪಡೆ, ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಭದ್ರತಾ ಸಿಬ್ಬಂದಿಯೊಂದಿಗೆ ಏಕಾಏಕಿ ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ.
ಸುಮಾರು 18 ವಾಹನಗಳಲ್ಲಿ ಬಂದ 25ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಬೆಂಗಳೂರಿನ ಒಟ್ಟು ಆರು ಕಡೆಗಳಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿರುವ ಸಚಿವರ ನಿವಾಸ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಿದೆ. ಪ್ರಸ್ತುತ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿದ್ದು, ಅಧಿಕಾರಿಗಳು ಸ್ಥಳದಲ್ಲೇ ಸುದೀರ್ಘ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.