ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಇಬ್ಬರೂ ಜೈಲು ಪಾಲಾಗಿದ್ದಾರೆ.
ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಬುಧವಾರ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಗಳನ್ನು ಒಂದನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಅಧಿಕಾರಿಗಳು, ಸದ್ಯ ನಮ್ಮ ಕಸ್ಟಡಿಗೆ ಬೇಡ, ಬೇಕಾದ್ರೆ ಮುಂದೆ ಮತ್ತೆ ಕಸ್ಟಡಿಗೆ ಪಡೆಯುವುದಾಗಿ ಹೇಳಿದೆ. ಹೀಗಾಗಿ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಇನ್ನು, ನಾಪತ್ತೆಯಾಗಿರುವ ಕೆಪಿಎಸ್ಸಿ ಸದಸ್ಯೆ ಶಾಂತ ಹೊಸಮನಿ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ಬೆಂಗಳೂರಿನ ಮತ್ತಿಕೆರೆ, ನಾಗರಬಾವಿ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಈ ಮಧ್ಯೆ ನಾಪತ್ತೆಯಾಗಿರೋ ಶಾಂತ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.