ಬೆಂಗಳೂರು: ಪತಿ- ಪತ್ನಿ ನಡುವೆ ರೀಲ್ಸ್ ನೋಡುವ ವಿಚಾರಕ್ಕೆ ಆರಂಭವಾದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ಘೋರ ದುರಂತ ರಾಜಧಾನಿ ಬೆಂಗಳೂರಿನ ಎಚ್ಎಎಲ್ ವಿಭೂತಿಪುರದಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದ ರಾಘವೇಂದ್ರ ಎಂಬ ವ್ಯಕ್ತಿ ತನ್ನ ಪತ್ನಿ ಶೃತಿಯ ರೀಲ್ಸ್ ಹುಚ್ಚಿಗೆ ಬೇಸತ್ತು, ಆಕೆಯ ತಲೆಗೆ ಬಿಯರ್ ಬಾಟಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಬಿಟ್ಟಿದ್ದರು. ನಿನ್ನೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ಗಲಾಟೆ ಆರಂಭವಾಗಿದೆ.
ಗಲಾಟೆ ವಿಕೋಪಕ್ಕೆ ತಿರುಗಿ ರಾಘವೇಂದ್ರ ಬಿಯರ್ ಬಾಟಲ್ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ರೀಲ್ಸ್ ವಿಚಾರಕ್ಕೆ ಪದೇ ಪದೇ ಗಲಾಟೆ
ಶೃತಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿಯವರೆಗೂ ಶೃತಿ ರೀಲ್ಸ್ ನೋಡುತ್ತಿದ್ದ ವೇಳೆ ಮತ್ತೆ ಗಲಾಟೆ ನಡೆದಿದ್ದು, ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಎಚ್ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.