ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿಗೆ ಎಸ್ ಐಆರ್ ಪ್ರಕ್ರಿಯೆಯಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ ಎಂದು ವರದಿಯಾಗಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.
ಆದರೆ, ಈ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕಾರ್ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಹೆಸರಿನ ಸಾಮ್ಯತೆಯಿಂದ ಗೊಂದಲ ಉಂಟಾಗಿರುವುದಾಗಿ ತಿಳಿಸಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 240ರ ಮತದಾರರ ಪಟ್ಟಿಯಲ್ಲಿ ಗೌರಮ್ಮ ಹೆಸರಿನ ಮೂವರು ಮತದಾರರಿದ್ದಾರೆ. ಕ್ರಮ ಸಂಖ್ಯೆ 1ರಲ್ಲಿ ದಾಖಲಾಗಿರುವ ಗೌರಮ್ಮ ಕೋಂ ಕೆಂಪೇಗೌಡ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿಯಾಗಿದ್ದು, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಸಂಬಂಧ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ಹೇಳಿದ್ದಾರೆ.
ಅದೇ ಹೆಸರಿನ ಇತರ ಇಬ್ಬರು ಮತದಾರರಿಗೆ (ಕ್ರಮಸಂಖ್ಯೆ 02 ಮತ್ತು 03) ನೋಟಿಸ್ ನೀಡಲಾಗಿದೆ. ಇದನ್ನೇ ತಪ್ಪಾಗಿ ಅರ್ಥೈಸಿ ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ ಎಂದು ಅವರು ತಿಳಿಸಿದ್ದಾರೆ.