ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್)ಯಲ್ಲಿ ಬುಧವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಯ ಕೊಠಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಬೆಂಕಿ ಅವಘಡದಲ್ಲಿ ಶಾಲಾ ಕೊಠಡಿಯಲ್ಲಿದ್ದ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಇತರೆ ಕಲಿಕಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಶಾಲೆಯ ಹೊಸ ಕಟ್ಟಡ ನಿರ್ಮಾಣವಾದ ನಂತರ ಈ ಹಳೆಯ ಕೊಠಡಿಯನ್ನು ಖಾಲಿ ಬಿಡಲಾಗಿತ್ತು ಎನ್ನಲಾಗಿದೆ.
ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕೊಠಡಿ ಹೊತ್ತಿ ಉರಿಯಲಾರಂಭಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೆಂಕಿ ಅವಘಡವು ಆಕಸ್ಮಿಕವಾಗಿ ಸಂಭವಿಸಿದೆಯೇ ಅಥವಾ ಯಾರಾದರೂ ಕಿಡಿಗೇಡಿಗಳು ಎಸಗಿದ ಕೃತ್ಯವೇ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.