ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಮೊಬೈಲ್ ಫೋನ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. 2 ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಹಾಗೂ ಸಹ ಆರೋಪಿ ಪ್ರತಾಪ್ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಬಳಿಕ ಕೋರ್ಟ್ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, FSL ವರದಿ ಬಂದ ಬಳಿಕ ಅವಶ್ಯಕತೆ ಇದ್ದರೆ ಕಸ್ಟಡಿಗೆ ಪಡೆಯುವುದಾಗಿ ಪೊಲೀಸರು ಹೇಳಿದ್ದಾರೆ. ಎರಡು ದಿನ ವಿಚಾರಣೆ ನಡೆಸಿರುವ ಪೊಲೀಸರು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ವಿಚಾರಣೆ ವೇಳೆ, ಪ್ರಜ್ವಲ್ ರೇವಣ್ಣ ಅವರು ಜೈಲಿನಿಂದ ತಮ್ಮ ತಂದೆ ರೇವಣ್ಣ ಮತ್ತು ತಾಯಿ ಭವಾನಿ ಅವರಿಗೆ ಕರೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಕೇವಲ ಒಂದು ಬಾರಿ ಮಾತ್ರ ಕರೆ ಮಾಡಿದ್ದೆ ಎಂದಿರುವುದಾಗಿ ವರದಿಯಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ (CCB) ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಪತ್ತೆಯಾಗಿತ್ತು. ಈ ಫೋನಿನಲ್ಲಿ ಫೇಸ್ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಂ, ನೆಟ್ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್ನಂತಹ ಆ್ಯಪ್ಗಳು ಇದ್ದವು. ಮನೆಯವರು ಹಾಗೂ ವಕೀಲರ ಜತೆ ಮಾತನಾಡಲು ಇದನ್ನು ಬಳಸುತ್ತಿದ್ದುದು ಬೆಳಕಿಗೆ ಬಂದಿತ್ತು. ಮೊಬೈಲ್ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ನಲ್ಲಿ ಪ್ರತಾಪ್ ಎಂಬಾತನನ್ನು ಮೊದಲ ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.