ಬೆಂಗಳೂರು: ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
10 ದಿನಗಳ ಅಪರಾಧ ತನಿಖಾ ದಳದ (ಸಿಐಡಿ) ಕಸ್ಟಡಿ ಅವಧಿ ಬುಧವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಸಿಐಡಿ ಅಧಿಕಾರಿಗಳು ನಗರದ ನ್ಯಾಯಾಲಯದ ಮುಂದೆ ಮಂಗಳವಾರ ಹಾಜರುಪಡಿಸಿದರು.
ಈ ಹಂತದಲ್ಲಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಅಗತ್ಯವಿಲ್ಲ ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಾಲಯವು ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಮುಂದಿನ ಹಂತದ ತನಿಖೆಯಲ್ಲಿ ಆರೋಪಿಗಳ ಪೊಲೀಸ್ ಕಸ್ಟಡಿ ಅಗತ್ಯವೆನಿಸಿದರೆ, ಮತ್ತೆ ಪೊಲೀಸ್ ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.
ಗಂಗ್ವಾರ್ ಮತ್ತು ಕನ್ನಾಳೆ ಅವರು 10 ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದು, ಈ ಅವಧಿಯಲ್ಲಿ ಅಧಿಕಾರಿಗಳು ಇಬ್ಬರನ್ನೂ ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ಮಾಹಿತಿಗಳು ತನಿಖಾಧಿಕಾರಿಗಳಿಗೆ ಲಭ್ಯವಾಗಿವೆ ಎಂದು ತಿಳಿದುಬಂದಿದೆ.
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕರಣದಲ್ಲಿನ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಆಗಸ್ಟ್ 31ರಂದು ಅವರನ್ನು 10 ದಿನಗಳ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರಿಸಲಿದೆ.