ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ವರದಿಗಳು ದೃಢಪಟ್ಟರೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.
ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ಪೋಸ್ಟರ್ಗಳು ಕಾಣಿಸಿಕೊಂಡಿರುವ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬೆಳವಣಿಗೆಯನ್ನು ಗಮನಿಸಿದ್ದು, ಶುಕ್ರವಾರ ತುಮಕೂರು ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಈ ಕುರಿತು ಚರ್ಚಿಸುವುದಾಗಿ ಹೇಳಿದರು.
ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ಇರುವುದು ದೃಢಪಟ್ಟರೆ, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ. ಈ ಪಡೆಯ ಅರ್ಧದಷ್ಟು ಸಿಬ್ಬಂದಿಯನ್ನು ಕೋಮು ಗಲಭೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಪಡೆಗೆ (ಎಸ್ಎಎಫ್) ಪರಿವರ್ತಿಸಲಾಗಿದ್ದು, ಉಳಿದ ಸಿಬ್ಬಂದಿ ನಕ್ಸಲ್ ನಿಗ್ರಹ ಘಟಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಒಂದು ವೇಳೆ ವರದಿಯಂತೆ ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ತುಮಕೂರಿಗೆ ನಕ್ಸಲ್ ನಿಗ್ರಹ ಪಡೆಯನ್ನು ಕರೆತರಲಾಗುವುದು ಎಂದು ಹೇಳಿದರು.