ರಾಮನಗರ: ರಾಮನಗರ ಜಿಲ್ಲೆಯ ಕೆಂಪಯ್ಯನದೊಡ್ಡಿ ಗ್ರಾಮದಲ್ಲಿರುವ ತಮ್ಮ ಪತಿಯ ಮನೆಯಲ್ಲಿ ಐದು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರ ಸಾವನ್ನಪ್ಪಿದ್ದರು. ಮೃತ ಮಹಿಳೆಯನ್ನು 19 ವರ್ಷದ ಮುನಿಲಕ್ಷ್ಮಿ ಎಂದು ಗುರುತಿಸಲಾಗಿದೆ.
ಇವರಿಗೆ 10 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಮುನಿಲಕ್ಷ್ಮಿ ಅವರ ತಾಯಿ ಬೈರಮ್ಮ ಅವರು, ಮಗಳ ಪತಿ ಶಂಕರಯ್ಯ, ಅತ್ತೆ ಭಾಗ್ಯಮ್ಮ ಹಾಗೂ ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.
ತನ್ನ ಮಗಳಿಗೆ ಪತಿ ಮತ್ತು ಅತ್ತೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದೂರುದಾರರು ಆರೋಪಿಸಿದ್ದಾರೆ.
ಟ್ರಾಕ್ಟರ್ ಸಾಲ ತೀರಿಸಲು ಹಣದ ಅಗತ್ಯವಿದೆ ಎಂದು ಹೇಳಿ, ಶಂಕರಯ್ಯ ಮತ್ತು ಭಾಗ್ಯಮ್ಮ ಮುನಿಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ತವರು ಮನೆಯಿಂದ 1 ಲಕ್ಷ ರೂಪಾಯಿ ತರುವಂತೆ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.
ಅದಕ್ಕಾಗಿ ಆಕೆಯ ಪೋಷಕರು 50,000 ರೂ. ಸಾಲ ಮಾಡಿ ನೀಡಿದ್ದರು ಮತ್ತು ಜಾನುವಾರುಗಳನ್ನು ಮಾರಾಟ ಮಾಡಿ ಒಟ್ಟು 1 ಲಕ್ಷ ರೂ. ಹೊಂದಿಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ವರದಕ್ಷಿಣೆ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.