ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಜೈಲು ಪಾಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರು ಕೊನೆಗೂ ಗುರುವಾರ ಪ್ರತ್ಯಕ್ಷವಾಗಿದ್ದು, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಶಾಂತಾ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅವರು ಸಿಐಡಿ ಕಚೇರಿಗೆ ಅಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಪಶುವೈದ್ಯಾಧಿಕಾರಿಗಳ ಅಕ್ರಮ ನೇಮಕಾತಿ ಹಗರಣ ಬಹಿರಂಗವಾದ ಬೆನ್ನಲ್ಲೇ ಶಾಂತಾ ನಾಪತ್ತೆಯಾಗಿದ್ದರು. ವಿಚಾರಣೆ ಸಂಬಂಧ ಸಿಐಡಿ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದರು. ಅಲ್ಲದೆ, ಆರೋಪಿಯ ಪತ್ತೆಗಾಗಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿಯೂ ಶೋಧ ನಡೆಸಿದ್ದರು.
ಪಶುವೈದ್ಯರ ಅಕ್ರಮ ನೇಮಕಾತಿ ಸಂಬಂಧ ಮಮಿತಾ ಎಂಬ ಅಭ್ಯರ್ಥಿಯ ಜೊತೆ ಮೂರು ಬಾರಿ ಫೋನ್ ಮೂಲಕ ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಮಾತುಕತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇಡಿ ಅಧಿಕಾರಿಗಳಿಗೂ ಸಿಗದೇ ಅವರು ಪರಾರಿಯಾಗಿದ್ದರು.