ಮಂಗಳೂರು (ದಕ್ಷಿಣ ಕನ್ನಡ): ಕರಾವಳಿಗರ ದಶಕಗಳ ಕನಸು, ತುಳುನಾಡಿನ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದ್ದು, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಕರಾವಳಿಗೆ ಹೊಸ ಪ್ರವಾಸೋದ್ಯಮ ನೀತಿ ಸೇರಿದಂತೆ ಹಲವು ತೀರ್ಮಾನಗಳನ್ನ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ತುಳು ಭಾಷೆಗೆ ಸಿಕ್ಕ ಅಧಿಕೃತ ಗೌರವ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ (ತುಳುನಾಡು) ಜನರ ದಶಕಗಳ ಹಕ್ಕೊತ್ತಾಯವಾಗಿದ್ದ ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ (Second Additional Official Language) ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ತೀರ್ಮಾನಿಸಿದೆ.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿ, 2,000 ವರ್ಷಗಳಿಗಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಮತ್ತು ಜಾಗತಿಕವಾಗಿ ಸುಮಾರು ಒಂದು ಕೋಟಿ ಜನ ಮಾತನಾಡುವ ತುಳು ಭಾಷೆಯ ಪ್ರಗತಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ, ಈ ಹಿಂದೆ ಡಾ. ಮೋಹನ್ ಆಳ್ವ ನೇತೃತ್ವದ ಸಮಿತಿಯು ಸಂವಿಧಾನದ 345ನೇ ವಿಧಿಯಡಿ ಎರಡನೇ ಅಧಿಕೃತ ಭಾಷಾ ಮಾನ್ಯತೆ ನೀಡಬಹುದು ಎಂದು ವರದಿ ಸಲ್ಲಿಸಿತ್ತು. ಅದರಲ್ಲೂ, ಸರ್ಕಾರದಿಂದ ಸಿಕ್ಕಿರುವ ಈ ಮಾನ್ಯತೆಯಿಂದಾಗಿ ಇನ್ಮುಂದೆ ಕರಾವಳಿ ಭಾಗದ ಸರ್ಕಾರಿ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ದೈನಂದಿನ ಆಡಳಿತಾತ್ಮಕ ಸಂವಹನಕ್ಕಾಗಿ ಕನ್ನಡದ ಜೊತೆಗೆ ತುಳು ಭಾಷೆಯನ್ನೂ ಬಳಸಲು ಅಧಿಕೃತ ಅವಕಾಶ ಸಿಗಲಿದೆ.
ದಕ್ಷಿಣ ಕನ್ನಡ ಜಿಲ್ಲೆ ಶೀಘ್ರ ಮಂಗಳೂರು ಜಿಲ್ಲೆ?
ತುಳು ಭಾಷೆಯ ಮಾನ್ಯತೆಯ ಜೊತೆಗೆ, ಕರಾವಳಿ ಜನರ ಬಹುದಿನಗಳ ಮತ್ತೊಂದು ಬೇಡಿಕೆಯಾದ, ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಮುಂದಿನ ಒಂದು ತಿಂಗಳ ಒಳಗಾಗಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದರೊಂದಿಗೆ, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟವು 'ಹೊಸ ಟೂರಿಸಂ ಪಾಲಿಸಿ' ಜಾರಿಗೆ ತರಲು ಅನುಮೋದನೆ ನೀಡಿದೆ.
ಧಾರ್ಮಿಕ ಕ್ಷೇತ್ರಗಳಿಗೆ ಭರ್ಜರಿ ಅನುದಾನ
ಕರಾವಳಿ ಭಾಗದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ಸಚಿವ ಸಂಪುಟವು ಕೋಟ್ಯಂತರ ರೂಪಾಯಿಗಳ ವಿಶೇಷ ಪ್ಯಾಕೇಜ್ ಪ್ರಕಟಿಸಿದೆ. ಅದರಂತೆ, ಕರಾವಳಿಯ ಐತಿಹಾಸಿಕ ದೇವಸ್ಥಾನಗಳು ಮತ್ತು ಮಠಗಳ ಜೀರ್ಣೋದ್ಧಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ₹12 ಕೋಟಿ ವಿಶೇಷ ಅನುದಾನ ಘೋಷಿಸಲಾಗಿದೆ. ಅದರಂತೆ, ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ 5 ಕೋಟಿ ರೂಪಾಯಿ ಹಾಗೂ ಒಡಿಯೂರು ಮಠ, ಮಾಣಿಲ ಮಠ ಸೇರಿದಂತೆ ಹಲವು ಕ್ಷೇತ್ರಗಳಿಗೆ ತಲಾ 1 ಕೋಟಿ ರೂಪಾಯಿ ನೀಡಲಾಗಿದೆ. ಇದರೊಂದಿಗೆ, ಸೌಹಾರ್ದತೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ದೃಷ್ಟಿಯಿಂದ ಕರಾವಳಿ ಭಾಗದ ಉಳ್ಳಾಲ ಸೈಯದ್ ಮದನಿ ಜುಮ್ಮಾ ಮಸೀದಿಗೆ 5 ಕೋಟಿ ರೂಪಾಯಿ ಸೇರಿದಂತೆ ವಿವಿಧ ಚರ್ಚ್, ಮಸೀದಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೂ ನೆರವು ಘೋಷಿಸಲಾಗಿದೆ. ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ಕಂಬಳಕ್ಕೆ ನೀಡುತ್ತಿದ್ದ ಅನುದಾನವನ್ನು 40 ಲಕ್ಷದಿಂದ 1 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಮುಂದುವರೆದು, ಪುತ್ತೂರಿನ ಬನ್ನೂರು ಗ್ರಾಮದ ಸೇಡಿಯಾಪು ಬಳಿ 549.79 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆ ಮತ್ತು ಹಾಸ್ಟೆಲ್ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ. ಇನ್ನು ಮುಲ್ಕಿ ತಾಲೂಕಿನಲ್ಲಿ 150 ಎಕರೆ ಜಾಗದಲ್ಲಿ ಬೃಹತ್ ಫಿಶರೀಸ್ ಪಾರ್ಕ್ ನಿರ್ಮಿಸಲು ತೀರ್ಮಾನಿಸಲಾಗಿದೆ. ಉಡುಪಿಯ ಹೆಬ್ರಿ ತಾಲೂಕಿನಲ್ಲಿ 113.89 ಎಕರೆ ಪ್ರದೇಶವನ್ನು ಕೈಗಾರಿಕಾ ವಲಯವಾಗಿ ರೂಪಿಸಿ, ಡೇಟಾ ಸೆಂಟರ್ಗಳು ಮತ್ತು ಹೊಸ ಉತ್ಪಾದನಾ ಘಟಕಗಳಿಗೆ ಜಾಗ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.