ಬೆಂಗಳೂರು: ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ವರ್ಣಮಾಲೆ ಬರೆಯಲು ಬಾರದನ್ನು ಕಂಡ ಶಾಸಕ ಪ್ರದೀಪ್ ಈಶ್ವರ್ ಆಘಾತಕ್ಕೊಳಗಾಗಿದ್ದಾರೆ.
ಶಿಕ್ಷಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತ ಪಡಿಸಿರುವ ಶಾಸಕರು ಸರ್ಕಾರಿ ಶಾಲೆಯ 180 ಶಿಕ್ಷಕರಿಗೆ ಕಾರಣ ಕೇಳಿ ನೊಟೀಸ್ ನೀಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಅವರು ಕ್ಷೇತ್ರ ಸಂಚಾರದ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಮಕ್ಕಳಿಗೆ ಕನಿಷ್ಠ ಅ, ಆ, ಇ, ಈ ಅಕ್ಷರಗಳೇ ಬರುವುದಿಲ್ಲ ಎಂಬುದು ತಿಳಿದಿದೆ. ಜೊತೆಗೆ ಈ ವಿದ್ಯಾರ್ಥಿಗಳಿಗೆ ಕೂಡುವುದು ಮತ್ತು ಕಳೆಯುವ ಲೆಕ್ಕಗಳು ಬಾರದ್ದನ್ನು ಮನಗಂಡಿದ್ದಾರೆ.
ಈ ವೇಳೆ ಈ ಮಕ್ಕಳಿಗೆ 1 ರಿಂದ 6 ನೇ ತರಗತಿಯವರೆಗೆ ಶಿಕ್ಷಣ ಕಲಿಸಿದ ಶಿಕ್ಷಕರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದರು. ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡದೇ ಇದ್ದ ಶಿಕ್ಷಕರಿಗೆ ನೋಟಿಸ್ ನೀಡಿ ಅವರನ್ನು ಅಮಾನತು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಖಡಕ್ ಸೂಚನೆಯನ್ನು ನೀಡಿದ್ದರು. ಹೀಗಾಗಿ ಇದೀಗ 180 ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ.
ಹೀಗಾಗಿ 2026-27 ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರಗತಿ ಮತ್ತು ಕಲಿಕೆಯನ್ನು ಪರಿಶೀಲನೆ ಮಾಡಲಾಗಿದೆ.
ಕಲಿಕೆಯಲ್ಲಿನ ಗುಣಮಟ್ಟಕ್ಕಿಂತ ಹಿಂದುಳಿದ ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಬೋಧನಾ ಕಾರ್ಯಗಳನ್ನು ನಿರ್ವಹಿಸಿರುವ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೆ, ನೋಟಿಸ್ಗೆ ಸಮಜಾಯಿಷಿಯನ್ನು ಪಡೆದು, ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಿ ವರದಿ ನೀಡುವಂತೆ ಸೂಚಿಸಲಾಗಿದೆ.