ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು ಹೊಡೆದ ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಶುಕ್ರವಾರ ಗಣೇಶ ಶೋಭಾಯಾತ್ರೆ ನಡೆಸಿದೆ.
ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.
ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವಿರುದ್ಧ ಮೈಸೂರು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಮೆರವಣಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಷ್ಟೇ ಅಲ್ಲ ಮೆರವಣಿಗೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಶನಿವಾರ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ನೀಡಿದೆ.
ಮೆರವಣಿಗೆ ಆಯೋಜಕರು ನಿಗದಿತ ಸಮಯದಲ್ಲಿ ಕಾರ್ಯಕ್ರಮ ಮುಗಿಸಿಲ್ಲ. ಇನ್ನು ಮೆರವಣಿಗೆಯಲ್ಲಿ ಪಾಲ್ಗೊಂಡ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ಎಫ್ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಕಾಂಗ್ರೆಸ್ ದೂರು ನೀಡಿದೆ.