ದೇಶ

ಗೋಡ್ಸೆ ದೇಶಭಕ್ತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದ

Lingaraj Badiger

ನವದೆಹಲಿ: ಮಹಾತ್ಮಾ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಓರ್ವ ಮಹಾನ್ ದೇಶಭಕ್ತ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಶುಕ್ರವಾರ ಸಂಸತ್ತಿನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸಾಕ್ಷಿ ಮಹಾರಾಜ್‌ರ ವಿವಾದಾತ್ಮಕ ಹೇಳಿಕೆ ಇಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿತು. ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ಕಾಂಗ್ರೆಸ್, ಬಿಜೆಪಿ ಸಂಸದನ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.

ಮಹಾತ್ಮಗಾಂಧಿ ಹಂತಕನನ್ನು ದೇಶಭಕ್ತ ಎಂದು ಹೊಗಳಿರುವುದು ಗಂಭೀರ ವಿಷಯ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಸಂಸದರು, ಸದನದ ಬಾವಿಗೆ ನುಗ್ಗಿ ಸಾಕ್ಷಿ ಮಹಾರಾಜ್ ಹೇಳಿಕೆ ವಿರುದ್ಧ ಪ್ರತಿಭಟಿಸಿದರು.

ಕಡೆಗೂ ಪ್ರತಿಪಕ್ಷದ ಪ್ರತಿಭಟನೆಗೆ ಮಣಿದ ಉತ್ತರ ಪ್ರದೇಶ ಬಿಜೆಪಿ ಸಂಸದ, ನನ್ನ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ ಮತ್ತು ಹೇಳಿಕೆಯನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.

ಇನ್ನು ಮಹಾರಾಜ್‌ರ ಹೇಳಿಕೆ ಹೊರಬರುತ್ತಿದ್ದಂತೆ ಸಾಕ್ಷಿ ಮಹಾರಾಜ್‌ರ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸಂಸದರ ಹೇಳಿಕೆ ಅವರ ವೈಯಕ್ತಿಕವಾಗಿದ್ದು ಅವರ ಹೇಳಿಕೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅಲ್ಲದೆ ಮಹಾತ್ಮಾ ಗಾಂಧಿ ಹಂತಕರನ್ನು ಸರ್ಕಾರ ಎಂದೂ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

SCROLL FOR NEXT