ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮತ್ತು `ನಮ್ಮ ಬೆಂಗಳೂರು ಪ್ರತಿಷ್ಠಾನ', ಬಿಬಿಎಂಪಿ ಯಲ್ಲಿನ ಅವ್ಯವಹಾರದ ಬಗ್ಗೆ ನಿಗದಿತ ಸಮಯದೊಳಗೆ ಆಡಿಟ್ ನಡೆಸಲು ಸಿಎಜಿಗೆ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಜತೆಗೆ ಪಾಲಿಕೆಯಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡುವಲ್ಲಿ ವಿಫಲಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. ಬಿಬಿಎಂಪಿಯಲ್ಲಿನ ಆರ್ಥಿಕ ಅವ್ಯವಹಾರಗಳ ಕುರಿತು ಸಿಎಜಿ ನಡೆಸಲಿರುವ ವರದಿಯನ್ನು ನ್ಯಾಯಾಲಯಕ್ಕೂ ನೀಡಬೇಕು ಎಂದು ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದಾರೆ. 2011-12, 2012-13, 2013-14 ಹಾಗೂ 2014-15ನೇ ಸಾಲಿನ ಆಡಿಟ್ ಮಾಡಿಸಬೇಕು ಎಂದು ಮನವಿ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತರು, ಅಧಿಕಾರಿಗಳ ಆಡಳಿತದಲ್ಲಿನ ನಿರ್ಲಕ್ಷ್ಯ ಮತ್ತು ನಿಷ್ಕ್ರಿ ಯತೆ ಕುರಿತಂತೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೂ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ ಸರಿಯಾದ ಸಮಯಕ್ಕೆ ಏಕೆ ಅವ್ಯವಹಾರಗಳ ಕುರಿತಂತೆ ಆಡಿಟ್ ನಡೆಸಲಿಲ್ಲ ಎಂಬುದಕ್ಕೆ ಕಾರಣಗಳನ್ನೂ ಪತ್ತೆ ಹಚ್ಚಬೇಕಿದೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ, 1976ರ ರಂತೆ ಆಡಿಟ್ ನಡೆಸಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿಕೆ ಸಲ್ಲಿಸಲಾಗಿದೆ.
2010ರಿಂದಲೂ ಬಿಬಿಎಂಪಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಲೆಕ್ಕಪತ್ರಗಳನ್ನು ಇಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ರಾಜೀವ್ ಚಂದ್ರಶೇಖರ್ ಅವರು, ಆಗಿನಿಂದಲೂ ಈ ಬಗ್ಗೆ ಒತ್ತಾಯಿಸುತ್ತಲೇ ಬಂದಿದ್ದಾರೆ.
2015ರ ಅಕ್ಟೋಬರ್ 8 ರಂದು ಬಿಬಿಎಂಪಿಯಲ್ಲಿನ ಆರ್ಥಿಕ ಅವ್ಯವಹಾರಗಳ ಬಗ್ಗೆ ಸಿಎಜಿಯಿಂದ ಆಡಿಟ್ ಮಾಡಿಸಿ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವತಃ ರಾಜೀವ್ ಚಂದ್ರಶೇಖರ್ ಪತ್ರ ಬರೆದಿದ್ದರು. ಪಾಲಿಕೆಯಲ್ಲಿನ ಹಲವಾರು ಅನುದಾನ ಮತ್ತು ಸಂಗ್ರಹಿಸಲಾದ ತೆರಿಗೆಯನ್ನು ಖಾಸಗಿ ಉಪಯೋಗಕ್ಕಾಗಿ ಕೆಲ ಭ್ರಷ್ಟ ಅಧಿಕಾರಿಗಳು ಬಳಸಿಕೊಂಡಿದ್ದಾರೆ. ಅಕ್ರಮವಾಗಿ ಖಾಸಗಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಬಗ್ಗೆ ಈ ಪತ್ರದಲ್ಲಿ ಉಲ್ಲೇಖಿಸಿದ್ದರು.
ಆದರೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದ ಕಾರಣ ಈಗ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಲೆಕ್ಕಪತ್ರಗಳನ್ನು ಸರಿಯಾಗಿ ಇಡದ ಕಾರಣದಿಂದಾಗಿಯೇ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಿಂದ ತಪ್ಪಿಸಿಕೊಳ್ಳಬೇಕಾಯಿತು ಎಂದೂ ಆರೋಪ ಮಾಡಲಾಗಿದೆ.
ಇನ್ನು ಮುಂದೆ ಆರ್ಥಿಕ ಅಶಿಸ್ತು ಆಡಳಿತಾತ್ಮಕ ವೈಫಲ್ಯಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಬೇಕು ಎಂಬ ಅಂಶವನ್ನೂ ಪಿಐಎಲ್ನಲ್ಲಿ ಸೇರಿಸಲಾಗಿದೆ. ಒಂದು ವೇಳೆ ಯಾವುದೇ ಅಧಿಕಾರಿಗಳು ಈ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಲ್ಲಿ ಅವರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ನಮ್ಮ ಬೆಂಗಳೂರು ಪ್ರತಿಷ್ಠಾನ ಮತ್ತು ರಾಜೀವ್ ಚಂದ್ರಶೇಖರ್ ಅವರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, 2010ರ ವರೆಗೆ ಮಾತ್ರ ಬಿಬಿಎಂಪಿಯಲ್ಲಿ ಆಡಿಟ್ ನಡೆಸಲಾಗಿದೆ. ನಂತರದ ವರ್ಷಗಳಲ್ಲಿ ಸರಿಯಾದ ರೀತಿಯಲ್ಲಿ ಲೆಕ್ಕಪತ್ರ ಪರಿಶೋಧನೆ ನಡೆಸಿಲ್ಲ. 2013ರಲ್ಲಿ ಸಿಎಜಿ ಒಂದು ವರದಿ ನೀಡಿದ್ದು, ಇದರ ಪ್ರಕಾರ, ಬಿಬಿಎಂಪಿಯ ಲೆಕ್ಕಪತ್ರಗಳು ಸರಿಯಾಗಿಲ್ಲ. ಕಾಮಗಾರಿ, ವೆಚ್ಚದ ಕುರಿತಂತೆ ದಾಖಲೆಗಳಿಲ್ಲ ಎಂದು ಹೇಳಿದೆ. ನಿಗದಿಯ ಸಮಯದಲ್ಲಿ ಆಡಿಟ್ ಮಾಡಿಲ್ಲ. ಜತೆಗೆ ಬಿಬಿಎಂಪಿ ಆಂತರಿಕವಾಗಿಯೂ ಯಾವುದೇ ಲೆಕ್ಕಪತ್ರಗಳನ್ನು ಇಟ್ಟುಕೊಂಡಿಲ್ಲ ಎಂದು 2015ರಲ್ಲಿ ಸಿಎಜಿ ಮತ್ತೊಮ್ಮೆ ಹೇಳಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos