ನವದೆಹಲಿ: ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿದ್ದು, ಸಂಸತ್ತಿನಲ್ಲಿ ಆಡಳತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಇಂದು ಲೋಕಸಭೆಯಲ್ಲಿ ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಪ್ರಸ್ತಾಪಿಸಿದ ಬಿಜೆಪಿ, ಭಾರತದಲ್ಲಿ ಮಾಧ್ಯಮ ನಿರ್ವಹಣೆಗಾಗಿ ಇಟಲಿ ಕಂಪನಿ ಬರೊಬ್ಬರಿ 50 ಕೋಟಿ ಖರ್ಚು ಮಾಡಿದೆ ಎಂದು ಆರೋಪಿಸಿದೆ,
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು, ಮಾಧ್ಯಮ ನಿರ್ವಹಣೆಗಾಗಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಗೆ 50 ಕೋಟಿ ನೀಡಲಾಗಿತ್ತು ಎಂದು ತಿಳಿಸಿದರು.
ಪ್ರತಿಪಕ್ಷ ಕಾಂಗ್ರೆಸ್ ನ ತೀವ್ರ ಪ್ರತಿಭಟನೆಯ ನಡುವೆಯೂ ವಿಷಯ ಪ್ರಸ್ತಾಪಿಸಿದ ಲೇಖಿ, ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿದ್ದು, ಅದನ್ನು ದುರ್ಬಳಕೆ ಮಾಡಿಕೊಂಡಿದ್ದು ದುರದೃಷ್ಟಕರ ಎಂದರು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಕಾಪ್ಟರ್ ಹಗರಣ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಖರ್ಗೆ, ಮೇಡಂ ನಾನು ನಿಮ್ಮನ್ನು ತುಂಬಾ ಗೌರವಿಸುತ್ತೇನೆ. ದಯವಿಟ್ಟು ಇದಕ್ಕೆ ಅವಕಾಶ ನೀಡಬೇಡಿ ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಮನವಿ ಮಾಡಿದರು.