ಮವು: ಬಿಎಸ್ಪಿ ನಾಯಕಿ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿದ್ದ ಉಚ್ಚಾಟಿತ ಉತ್ತರ ಪ್ರದೇಶ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರು ಭಾನುವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮಾಯಾವತಿ ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದಿದ್ದ ದಯಾಶಂಕರ್ ಸಿಂಗ್ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸುಮಾರು 10 ದಿನಗಳ ಕಾಲ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ದಯಾಶಂಕರ್ ಸಿಂಗ್ ಅವರನ್ನು ಜುಲೈ 29ರಂದು ಉತ್ತರ ಪ್ರದೇಶ ವಿಶೇಷ ಟಾಸ್ಕ್ ಫೋರ್ಸ್ ಮತ್ತು ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಕ್ಸರ್ ನಲ್ಲಿ ಬಂಧಿಸಿದ್ದರು.
ಜೈಲಿನಿಂದ ಬಿಡುಗಡೆಯಾದ ಬಳಿಕ ಪ್ರತಿಕ್ರಿಯಿಸಿದ ದಯಶಂಕರ್ ಸಿಂಗ್, ನನ್ನ ಪತ್ನಿ ಮತ್ತು ಮಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಆ ಕಾರಣ ಈಗಲೇ ಲಖನೌಗೆ ತೆರಳುತ್ತೇನೆ. ಮೊದಲು ನನ್ನ ಕುಟುಂಬವನ್ನು ಕಾಣಬೇಕು ಎಂದು ಬೇರಿನ್ನಾವ ಪ್ರಶ್ನೆಗೂ ಉತ್ತರಿಸದೇ ತೆರಳಿದ್ದಾರೆ.
ಮಾಯಾವತಿ ಅವರು ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಟೀಕಿಸಿದ್ದರು. ಇದಕ್ಕೆ ಸ್ವಪಕ್ಷ ಬಿಜೆಪಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.