ನವದೆಹಲಿ: 70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಭದ್ರತೆ ಹೆಚ್ಚಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಉನ್ನತ ಮಟ್ಟದ ನಡೆಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ದೇಶದಲ್ಲಿ ಯಾವುದೇ ರೀತಿಯ ಅನೈತಿಕ ಹಾಗೂ ದುಷ್ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಿರುವ ಕೇಂದ್ರ, ಈಗಾಗಲೇ ದೇಶದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದೆ, ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ರಾಜನಾಥ್ ಸಿಂಗ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಉನ್ನತ ಮಟ್ಟದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ, ಗುಪ್ತಚರ ಇಲಾಖೆ (ಐಬಿ) ನಿರ್ದೇಶಕ ದಿನೇಶ್ವಾರ್ ಶರ್ಮಾ, ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (ಆರ್ ಎಡಬ್ಲ್ಯೂ) ಮುಖ್ಯಸ್ಥ ರಜೀಂದರ್ ಖನ್ನಾ ಮತ್ತು ದೆಹಲಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಮಾ ಅವರು ಹಾಜರಿದ್ದರು.
ಹೆಚ್ಚಿನ ಭದ್ರತೆ ಹಿನ್ನೆಲೆಯಲ್ಲಿ ಇದೀಗ ದೆಹಲಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ಆ.15 ರಂದು ಎಲ್ಲಾ ಪೊಲೀಸರ ರಜೆಯನ್ನು ರದ್ದು ಮಾಡುವಂತೆ ಹಾಗೂ ಎಲ್ಲಾ ಪೊಲೀಸರು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದ್ದಾರೆ. ಅಲ್ಲದೆ, ಪ್ರತೀ ಪಿಸಿಆರ್ ವ್ಯಾನ್ ನಲ್ಲಿ ಸಾಕಷ್ಟು ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇರಿಸುವಂತೆ ತಿಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.