ನವದೆಹಲಿ: ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಮರ ಮುಂದುವರೆದಿದ್ದು, ಈ ಸಂಬಂಧ ಪ್ರತಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿವೆ.
ರಾಷ್ಟ್ರಪತಿ ಭೇಟಿಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಳಿಗಾಲದ ಅಧಿವೇಶನ ಸಂಪೂರ್ಣ ಹಾಳಾಗಲು ಸರ್ಕಾರವೇ ಕಾರಣ. ಸರ್ಕಾರ ಸುಗಮ ಕಲಾಪ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಖರ್ಗೆ ಆರೋಪಿಸಿದರು. ಅಲ್ಲದೆ ನೋಟು ನಿಷೇಧ ಕ್ರಮದಿಂದ ಜನಸಾಮಾನ್ಯರಿಗೆ ಉಂಟಾಗಿರುವ ಸಮಸ್ಯೆಯನ್ನು ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ ಎಂದು ಹೇಳಿದ್ದಾರೆ.
" ನೋಟು ನಿಷೇಧದಿಂದ ಜನರು ಸಾವನ್ನಪ್ಪಿರುವುದರ ಬಗ್ಗೆ ಹಾಗೂ ಜನಸಾಮಾನ್ಯರು ಎದುರಿಸಿದ ಸಂಕಷ್ಟದ ಬಗ್ಗೆ ಸಂಸತ್ ನ ಅಧಿವೇಶನದಲ್ಲಿ ಚರ್ಚಿಸಲು ಬಯಸಿದ್ದೆವು. ಆದರೆ ಕೇಂದ್ರ ಸರ್ಕಾರ ಚರ್ಚೆಗೆ ಅವಕಾಶ ನೀಡಲಿಲ್ಲ. ಈ ಬಗ್ಗೆ ಎಲ್ಲವನ್ನೂ ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಜೆಡಿ (ಯು), ಸಿಪಿಐ, ಸಿಪಿಐ (ಎಂ), ಎನ್ಸಿಪಿ, ಡಿಎಂಕೆ ಹಾಗೂ ಎಐಯುಡಿಎಫ್ ಪಕ್ಷದ ಮುಖಂಡರು ಪಾರ್ಲಿಮೆಂಟ್ನ ಗಾಂಧಿ ಪ್ರತಿಮೆಯ ಬಳಿ ಒಂದಾಗಿ ರಾಷ್ಟ್ರಪತಿಯವರನ್ನು ಭೇಟಿಯಾದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಜೆಡಿಯು ನಾಯಕ ಶರದ್ ಯಾದವ್, ರಾಹುಲ್ ಗಾಂಧಿ, ಸುದೀಪ್ ಬಂಡೋಪಾಧ್ಯಾಯ ಮೋದಲಾದವರು ವಿಪಕ್ಷಗಳ ನಿಯೋಗದಲ್ಲಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos