ಲಖನೌ: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿರುವಾಗ ಉತ್ತರ ಪ್ರದೇಶ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ತಾರಕಕ್ಕೇರಿದ್ದು, ತಮ್ಮ ಬೆಂಬಲಿಗರನ್ನೊಳಗೊಂಡ 167 ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿ ಬಿಡುಗಡೆ ಮಾಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಅವರ ಸಹೋದರ ಸಂಬಂಧಿ ರಾಮ್ ಗೋಪಾಲ್ ಯಾದವ್ ಅವರಿಗೆ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಪಕ್ಷದ ಶಿಸ್ತು ಉಲ್ಲಂಘಿಸಿ ಪ್ರತ್ಯೇಕ ಪಟ್ಟಿ ಬಿಡುಗಡೆ ಮಾಡಿದ ಅಖಿಲೇಶ್ ಯಾದವ್ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡಿದ ರಾಮ್ ಗೋಪಾಲ್ ಯಾದವ್ ಅವರಿಗೆ ಮುಲಾಯಂ ಸಿಂಗ್ ಯಾದವ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಅಲ್ಲದೆ ನಾಳೆ ತಾವು ಪ್ರಕಟಿಸಿದ ಅಭ್ಯರ್ಥಿಗಳ ಸಭೆ ಕರೆದಿದ್ದಾರೆ.
ನಿನ್ನೆ ಪಕ್ಷದ ಮುಖ್ಯಸ್ಥ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ತಮ್ಮೊಂದಿಗೆ ಚರ್ಚಿಸಿದೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅಖಿಲೇಶ್ ಯಾದವ್ ಅವರು ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ತಂದೆಗೆ ತಿರುಗೇಟು ನೀಡಿದ್ದರು.
ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಹಾಗೂ ಚಿಕ್ಕಪ್ಪ ಶಿವಪಾಲ್ ಯಾದವ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದ ನಂತರ 167 ಅಭ್ಯರ್ಥಿಗಳ ಪಟ್ಟಿ ಘೋಷಿಸಿದರು. ಈ ಮೂಲಕ ತಾವು ಪಕ್ಷದ ಬೆಂಬಲದೊಂದಿಗೆ ಅಥವಾ ಪಕ್ಷದ ಬೆಂಬಲ ಇಲ್ಲದೆಯೂ ಚುನಾವಣೆ ಎದುರಿಸಲು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos