ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಶುಕ್ರವಾರ ಈ ಬಗ್ಗೆ ತಮ್ಮ ವಕೀಲರ ಮೂಲಕವಾಗಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವ ಕೇಜ್ರಿವಾಲ್ ಅವರು, 10 ಕೋಟಿ ರು.ಗಳ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಮತ್ತು ಪ್ರಕರಣ ಸಂಬಂಧ ಪ್ರತಿಕ್ರಿಯಿಸಲು ಕನಿಷ್ಠ ಮೂರು ವಾರಗಳ ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.
ಈ ಹಿಂದೆ ಡಿಡಿಸಿಎಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಅರುಣ್ ಜೇಟ್ಲಿ ಅವರ ಪಾತ್ರವೂ ಇದೆ ಎಂದು ಆರೋಪಿಸಿದ್ದ ಆಮ್ ಆದ್ಮಿ ಪಕ್ಷ ಈ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕ ಟೀಕೆ ಮಾಡಿತ್ತು. ಈ ಹಿನ್ನಲೆಯಲ್ಲಿ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ಕೇಜ್ರಿವಾಲ್ ಹಾಗೂ ಸಹಚರರು, ಸುಳ್ಳು ಆರೋಪ ಮಾಡುತ್ತಿದ್ದಾರೆ. ಡಿಡಿಸಿಎ ಹಗರಣದಲ್ಲಿ ವಿನಾಕಾರಣ ತಮ್ಮ ಕುಟುಂಬದವರ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.