ನವದೆಹಲಿ: ಭಾರತ ವಿರೋಧಿ ಚಟುವಟಿಕೆಗಳನ್ನು ಸಹಿಸಿಕೊಳ್ಳುವುದಿಲ್ಲ. ಭಾರತದ ವಿರೋಧವಾಗಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲ ಯ(ಜೆಎನ್ಯು)ನಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ವಿದ್ಯಾರ್ಥಿಗಳ ಗುಂಪೊಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜನಾಥ್ ಸಿಂಗ್, ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಾ, ಏಕತೆಯನ್ನು ಕದಡುವವರನ್ನು ಸುಮ್ಮನೆ ಬಿಡುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಜೆಎನ್ ಯುನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿ, ಭಾರತ ವಿರೋಧಿ ಚಟುವಟಿಕೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರೋ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ದೆಹಲಿ ಪೊಲೀಸರಿಗೆ ರಾಜನಾಥ್ ಸಿಂಗ್ ಸೂಚಿಸಿದ್ದಾರೆ.
ಇದೇ ವೇಳೆ ಗೃಹ ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ಮಾತೃ ದೇಶಕ್ಕೆ ದ್ರೋಹ ಬಗೆಯುವವರನ್ನು ಎಂದಿಗೂ ಭಾರತೀಯರು ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರು ಯೂನಿರ್ವಸಿಟಿಯಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಫ್ಜಲ್ ಗುರುಗೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿಗಳ ಬಣದ ನಡುವೆ ಗಲಾಟೆ ನಡೆದಿತ್ತು.
ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ಅಫ್ಜಲ್ ಗುರು ಆರೋಪಿಯಾಗಿದ್ದ. ಈತನನ್ನು 2013ರ ಫೆಬ್ರುವರಿ 9ರಂದು ತಿಹಾರ್ ಜೈಲಿನಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ಗಲ್ಲಿಗೇರಿಸಲಾಗಿತ್ತು.