ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಿದ್ದು, ಶನಿವಾರ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಓರ್ವ ಗೆರಿಲ್ಲಾ ಪಡೆಯ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಭದ್ರತಾಪಡೆಗಳನ್ನು ಗುರಿಯಾಗಿಸಿಕೊಂಡ ಓರ್ವ ಗೆರಿಲ್ಲಾ ಪಡೆಯ ಉಗ್ರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಉಗ್ರನತ್ತ ಪ್ರತಿದಾಳಿ ನಡೆಸಿದ ಸೈನಿಕರು ಉಗ್ರನನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಡಿಯಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿಗಳು ಬಂದ ಹಿನ್ನಲೆಯಲ್ಲಿ ಶುಕ್ರವಾರದಿಂದಲೇ ಕಾರ್ಯಾಚರಣೆ ಆರಂಭಿಸಿರುವ ಭದ್ರತಾಪಡೆಗಳು ಇಂದು ಬೆಳಗ್ಗೆ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್ ಅಧಿಕಾರಿಗಳು, ‘ರಾಷ್ಟ್ರೀಯ ರೈಫಲ್ಸ್ ಮತ್ತು ರಾಜ್ಯ ಪೊಲೀಸ್ ಪಡೆಯ ವಿಶೇಷ ಕಾರ್ಯಾಚರಣಾ ತಂಡ (ಎಸ್ಒಜಿ) ಕುಪ್ವಾರ ಜಿಲ್ಲೆಯ ಡಾರ್ಡ್ಪೋರ (ಲೋಲಾಬ್) ಪ್ರದೇಶದಲ್ಲಿ ಉಗ್ರಗಾಮಿಗಳ ವಿರುದ್ಧ ಶುಕ್ರವಾರದಿಂದ ಕಾರ್ಯಾಚರಣೆ ನಡೆಸಿದ್ದು, ಈವರೆಗೆ ಒಬ್ಬ ಉಗ್ರಗಾಮಿ ಹತನಾಗಿದ್ದಾನೆ’ ಎಂದು ತಿಳಿಸಿದ್ದಾರೆ. ಸೇನಾ ಮೂಲಗಳು ತಿಳಿಸಿರುವಂತೆ ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸುಮಾರು ಮೂವರು ಉಗ್ರಗಾಮಿಗಳು ಅವಿತು ಸೇನಾಪಡೆಗಳು ದಾಳಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.