ಸಿಬಿಐ ಅಧಿಕಾರಿಗಳು ಬಂಧಿಸಿದ್ದ ದೆಹಲಿ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ (ಸಂಗ್ರಹ ಚಿತ್ರ)
ನವದೆಹಲಿ: ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅಮಾನತ್ತಿಗೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ಕೇಸಿನಲ್ಲಿ ಸಿಬಿಐ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ದೆಹಲಿ ಸರ್ಕಾರದ ಜಾಗೃತ ಸಂವಹನ ವ್ಯವಸ್ಥೆ ಇಂಡಿಯಾ ಲಿಮಿಟೆಡ್ ಎಂಬ ಸಾರ್ವಜನಿಕ ವಲಯ ಘಟಕದ ಮಾಜಿ ಮತ್ತು ಈಗಿನ ವ್ಯವಸ್ಥಾಪಕ ನಿರ್ದೇಶಕರಾದ ಆರ್. ಎಸ್.ಕೌಶಿಕ್ ಮತ್ತು ಜಿ.ಕೆ.ನಂದಾ ಅವರನ್ನು ಬಂಧಿಸಿದ್ದು, ಟೆಂಡರ್ ನೀಡಿಕೆಯಲ್ಲಿ ಅಕ್ರಮವಾಗಿ ಖಾಸಗಿ ಕಂಪೆನಿಗೆ ಅನುಕೂಲ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಕರೆದವರಿಗೆ ಬೆದರಿಕೆಯೊಡ್ಡುತ್ತಿದ್ದ ಆರೋಪವೂ ಇವರ ಮೇಲಿದೆ.
ಈ ಇಬ್ಬರ ಬಂಧನದಿಂದಾಗಿ ಸಿಬಿಐ ಅಧಿಕಾರಿಗಳು ಬಂಧಿಸಿದ ಆರೋಪಿಗಳ ಸಂಖ್ಯೆ 6ಕ್ಕೇರಿದೆ. ರಾಜೇಂದ್ರ ಕುಮಾರ್ ಅವರಲ್ಲದೆ ಮುಖ್ಯಮಂತ್ರಿ ಕೇಜ್ರಿವಾಲ್ ಸರ್ಕಾರದಲ್ಲಿದ್ದ ಉಪ ಕಾರ್ಯದರ್ಶಿ ತರುಣ್ ಶರ್ಮಾ, ಎಂಡೀವರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ನ ಇಬ್ಬರು ಮಾಲೀಕರಾದ ಸಂದೀಪ್ ಕುಮಾರ್ ಮತ್ತು ದಿನೇಶ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಮೊನ್ನೆ ಶುಕ್ರವಾರ ಸಿಬಿಐ ಅಧಿಕಾರಿಗಳು ಆರು ಕಡೆಯಲ್ಲಿ ದಾಳಿ ನಡೆಸಿದ್ದಾರೆ.