ಪಣಜಿ: ಪಠಾಣ್ ಕೋಟ್ ದಾಳಿ ನಡೆಸುವುದಕ್ಕೆ ಪಾಕಿಸ್ತಾನದ ಏಜೆನ್ಸಿಗಳು ಸಹಾಯ ಮಾಡಿಲ್ಲ ಎಂದು ರಾಷ್ಟ್ರೀಯ ತನಿಖಾ ತಂಡದ ಮುಖ್ಯಸ್ಥ ಶರದ್ ಕುಮಾರ್ ಅವರು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೇ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪಠಾಣ್ ಕೋಟ್ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದವರಲ್ಲ ಎಂದಾದರೇ, ಯಾರು ದಾಳಿ ನಡೆಸಿದ್ದು ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ದಿಗ್ವಿಜಯ್ ಆಗ್ರಹಿಸಿದ್ದಾರೆ.
ಎನ್ ಐಎ ಮುಖ್ಯಸ್ಥ ಶರದ್ ಕುಮಾರ್ ಅವರ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೇ ನೀಡಬೇಕು. ಮೋದಿ, ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮನೋಹರ್ ಪರಿಕ್ಕರ್ ವಿರುದ್ಧ ವಾಗ್ಧಾಳಿ ನಡೆಸಿದ ದಿಗ್ವಿಜಯ್ ಸಿಂಗ್, ಪರಿಕ್ಕರ್ ತಮ್ಮ ತವರು ನೆಲೆಯಾದ ಗೋವಾದ ಕಡೆ ಹೆಚ್ಚು ಕಾಳಜಿ. ದೇಶದ ಬಗ್ಗೆ ಗಮನ ಹರಿಸುತ್ತಿಲ್ಲ. ಹೆಸರಿಗೆ ಮಾತ್ರ ರಕ್ಷಣಾ ಸಚಿವ. ಆದರೆ ಗೋವಾದ ಸೂಪರ್ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಮಾತನಾಡಿದ್ದ ಎನ್ ಐಎ ನಿರ್ದೇಶಕ ಶರದ್ ಕುಮಾರ್ ಅವರು, ವಾಯುನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರವಾಗಲಿ ಅಥವಾ ಪಾಕಿಸ್ತಾನದ ಸರ್ಕಾರಿ ಸಂಸ್ಥೆಗಳಾಗಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ನೆರವು ನೀಡಿಲ್ಲ. ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos