ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕನ್ಹಯ್ಯ ಕುಮಾರ್ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರು, ಯಾವುದೇ ದೇಶ ವಿರೋಧಿ ಘೋಷಣೆ ಕೂಗಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನು ಸುವ್ಯವಸ್ಥೆ ಇದೆ. ಈ ಬಗ್ಗೆ ನೀವು ಚಿಂತಿಸುವ ಅಗತ್ಯ ಇಲ್ಲ ಎಂದು ಅರ್ಜಿದಾರರಿಗೆ ಹೇಳಿದರು.
ದೇಶ ದ್ರೋಹದ ಪ್ರಕರಣದಡಿ ಬಂಧನಕ್ಕೊಳಗಾಗಿ, ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕನ್ಹಯ್ಯ ಕುಮಾರ್ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನ್ಯಾಯದ ದೃಷ್ಟಿಯಿಂದ ಗುಪ್ತಚಲ ಇಲಾಖೆಯಿಂದ ಹೆಚ್ಚಿನ ತನಿಖೆಗೆ ಸೂಚಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ದೇವ್ ದತ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದರು.