ನವದೆಹಲಿ: ಮಾರ್ಚ್ 17ರೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಹೇಳಿದ್ದ ಜಾಟ್ ಸಮುದಾಯದ ನಾಯಕರು ಇದೀಗ ತಮ್ಮ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದ್ದಾರೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲು ಜಾರಿಗೊಳಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಟ್ ನಾಯಕರು ಸರ್ಕಾರದ ಭರವಸೆಯ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.
ಇಂದು ಜಾಟ್ ಸಮುದಾಯದ ನಾಯಕರು ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ, ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಸಿದ್ಧಪಡಿಸಿರುವ ಕರುಡು ಮಸೂದೆ ಬಗ್ಗೆ ನಮಗೆ ತೃಪ್ತಿ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಸರ್ಕಾರಕ್ಕೆ ಹೊಸ ಡೆಡ್ ಲೈನ್ ನೀಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾಟ್ ನಾಯಕ ಯಶ್ಪಾಲ್ ಮಲಿಕ್ ಅವರು, ನಾವು ಇಂದು ಸರ್ಕಾರದೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಇದೇ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದ ಮಸೂದೆ ಮಂಡಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಹೀಗಾಗಿ ನಾವು ಸರ್ಕಾರಕ್ಕೆ ಮಾರ್ಚ್ 31ರವರೆಗೆ ಕಾಲಾವಕಾಶ ನೀಡಿದ್ದೇವೆ ಎಂದರು.
ಒಂದು ವೇಳೆ ಮಾರ್ಚ್ 31ರೊಳಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಏಪ್ರಿಲ್ 4ರಂದು ಸಭೆ ಸೇರಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸುವುದಾಗಿ ಯಶ್ಪಾಲ್ ತಿಳಿಸಿದ್ದಾರೆ.
ಕಳೆದ ತಿಂಗಳು ಹರ್ಯಾಣ ರಾಜ್ಯದಲ್ಲಿ ಜಾಟ್ ಸಮುದಾಯದವರು ನಡೆಸಿದ ಪ್ರತಿಭಟನೆ ವೇಳೆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪೊಲೀಸ್ ಪಡೆ ಸೋತುಹೋಗಿತ್ತು. 30 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆಗ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ರೊಹ್ ಟಕ್ ಶ್ರೀಕಾಂತ್ ಜಾಧವ್ ಅವರನ್ನು ಹರ್ಯಾಣ ಸರ್ಕಾರ ಸೇವೆಯಿಂದ ವಜಾಗೊಳಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos