ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ಗಳನ್ನು ನಿಷೇಧಿಸುವ ಮೂಲಕ ಕಪ್ಪು ಹಣವನ್ನು ಹೊಂದಿದವರನ್ನು ರಕ್ಷಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲಕ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ನೋಟ್ ನಿಷೇಧದ ನಿರ್ಧಾರವನ್ನು ವಿರೋಧಿಸಿ ಮಮತಾ ಬ್ಯಾನರ್ಜಿ ಅವರು ಇಂದು ಶಿವಸೇನೆ, ಅಕಾಲಿ ದಳ, ಆಮ್ ಆದ್ಮಿ ಪಕ್ಷ ಹಾಗೂ ನ್ಯಾಷನಲ್ ಕಾನ್ಫೆರನ್ಸ್ ಪಕ್ಷಗಳೊಂದಿಗೆ ರಾಷ್ಟ್ರಪತಿ ಭವನದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.
ಈ ವೇಳೆ ಮಾತನಾಡಿದ ಮಮತಾ ಕೇಂದ್ರ ಸರ್ಕಾರ ಕಪ್ಪು ಕುಳಗಳನ್ನು ರಕ್ಷಿಸುತ್ತಿದ್ದು, ಇದರಿಂದ ನಾಳೆ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸುವುದಾಗಿ ತಿಳಿಸಿದ್ದಾರೆ.
ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲೂ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನೋಟ್ ನಿಷೇಧದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿವೆ.