ದೇಶ

ಒಡಿಶಾ ಅಗ್ನಿ ದುರಂತ: ಪೊಲೀಸರಿಗೆ ಶರಣಾದ ಆಸ್ಪತ್ರೆ ಆಧ್ಯಕ್ಷ

Manjula VN

ಭುವನೇಶ್ವರ: ಒಡಿಶಾ ರಾಜಧಾನಿಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್'ಯುಎಂ ಆಸ್ಪತ್ರೆ ಅಧ್ಯಕ್ಷ ಮನೋಜ್ ನಾಯಕ್ ಅವರು ಗುರುವಾರ ಪೊಲೀಸರಿಗೆ ಶರಣಾಗಿದ್ದಾರೆ.

ಅಗ್ನಿ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆ ಅಧ್ಯಕ್ಷ ಮನೋಜ್ ನಾಯಕ್ ಅವರ ಪತ್ನಿ ಸರಸ್ವತಿ ದಾಸ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ವೊಂದನ್ನು ಜಾರಿ ಮಾಡಿದ್ದರು.

ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಇರುವುದು ಅಗ್ನಿ ದುರಂತಕ್ಕೆ ಕಾರಣವಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಇದರಂತೆ ಪ್ರಕರಣದ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿರುವ ಅಧಿಕಾರಿಗಳು ಆಸ್ಪತ್ರೆ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೆ, ನಾಲ್ಕು ಮಂದಿಯನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಗ್ನಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ನಿನ್ನೆಯಷ್ಟೇ ಕೇಂದ್ರ ಆರೋಗ್ಯ ಸಚಿವ ನಡ್ಡಾ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆಯನ್ನು ನೀಡಿದ್ದರು.

SCROLL FOR NEXT