ಶ್ರೀನಗರ: ಕಾಶ್ಮೀರದಲ್ಲಿ ಹಿಂಸಾಚಾರ ಪ್ರಚೋದನೆಗೆ ಕುಮ್ಮಕ್ಕು ನೀಡುವ ಮೂಲಕ ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ 12 ಉನ್ನತ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಭುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಉಂಟಾಗಿದ್ದ ಹಿಂಸಾಚಾರ ಮತ್ತು ಬಳಿಕ ಭಾರತೀಯ ಸೇನೆ ವಿರುದ್ಧದ ಪ್ರತಿಭಟನೆಯಲ್ಲಿ ನಡೆದ ಗಲಭೆಯ ಲಾಭ ಪಡೆಯಲೆತ್ನಿಸಿದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು, ಸರ್ಕಾರದ 12 ಮಧ್ಯಮ ಉನ್ನತ ಅಧಿಕಾರಿಗಳನ್ನು ವಜಾ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೇವಲ ಇದು ಮಾತ್ರವಲ್ಲದೇ ಮತ್ತೆ 100 ಅಧಿಕಾರಿಗಳ ವಿರುದ್ಧ ಸರ್ಕಾರ ಶಂಕೆ ವ್ಯಕ್ತಪಡಿಸಿದ್ದು, ಈ ಅಧಿಕಾರಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಶೀಘ್ರದಲ್ಲಿ ಈ ಎಲ್ಲ 100 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ವಜಾಗೊಂಡಿರುವ ಅಧಿಕಾರಿಗಳ ಪೈಕಿ ಭೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತೆಯೇ ವಜಾಗೊಂಡ ಎಲ್ಲ ಅಧಿಕಾರಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಅಧಿಕಾರಿಗಳು ತಪ್ಪಿತಸ್ಥರು ಎಂದು ಸಾಬೀತಾದರೆ ಸಾರ್ವಜನಿ ಭದ್ರತಾ ಕಾಯ್ದೆಯಡಿಯಲ್ಲಿ ಯಾವುದೇ ರೀತಿಯ ವಿಚಾರಣೆ ಇಲ್ಲದೇ ಇವರಿಗೆ 6 ತಿಂಗಳ ಕಠಿಣ ಸಜೆಯಾಗಲಿದೆ.
ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಉಂಟಾದ ಕಾಶ್ಮೀರ ಗಲಭೆಯಲ್ಲಿ ಈವರೆಗೂ ಸುಮಾರು 90 ಮಂದಿ ಸಾವನ್ನಪ್ಪಿದ್ದು, 12 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.