ದೇಶ

ಕೇಜ್ರಿವಾಲ್ ಕಾನೂನು ಹೋರಾಟಕ್ಕೆ ಸಾರ್ವಜನಿಕರ ಹಣ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ

Lingaraj Badiger
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪರ ವಾದಿಸುತ್ತಿರುವ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ದೆಹಲಿ ಸರ್ಕಾರದಿಂದ 1.22 ಕೋಟಿ ರುಪಾಯಿ ಕಾನೂನು ಶುಲ್ಕ ನೀಡಲಾಗುತ್ತಿದ್ದು, ಸಾರ್ವಜನಿಕರ ಹಣದ ದುರ್ಬಳಕೆ ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅರ್ಜಿದಾರರು ಪ್ರಸ್ತಾಪಿಸರುವ ವಿಷಯ ಈಗಾಗಲೇ ಲೆಫ್ಟಿನೆಂಟ್ ಗವರ್ನರ್ ಮುಂದೆ ಬಾಕಿ ಇದ್ದು, ಸಂಬಂಧಪಟ್ಟವರು ಆ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಹಾಗ ಕೋರ್ಟ್ ಗೆ ಬನ್ನಿ ಎಂದು ಕಾರ್ಯಕಾರಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಹಾಗೂ ನ್ಯಾಯಮೂರ್ತಿ ಅನು ಮಲ್ಹೋತ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.
ಅರುಣ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಹಣಕಾಸು ಅಕ್ರಮ ಎಸಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಎಎಪಿ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಜೇಟ್ಲಿ ಅವರು ಕೇಜ್ರಿವಾಲ್ ಹಾಗೂ ಐವರು ಆಪ್ ನಾಯಕರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದು, ಆಪ್ ನಾಯಕರ ಪರ ಜೇಠ್ಮಲಾನಿ ವಾದಿಸುತ್ತಿದ್ದಾರೆ.
SCROLL FOR NEXT