ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕರು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಬಾಬ್ರಿ ಮಸೀದಿ ಧ್ವಂಸಗೊಳಿಸಲು ರೂಪಿಸಲಾಗಿದ್ದ ಸಂಚು ಪ್ರಕರಣದ ಬಗ್ಗೆ ಏ.19 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ವಿಚಾರಣೆಗೆ ಒಪ್ಪಿಗೆ ನೀಡಿದೆ.
ಲಖನೌ ಹಾಗೂ ರಾಯ್ ಬರೇಲಿಯ ನ್ಯಾಯಾಲಯಗಳಲ್ಲಿ ಪ್ರತ್ಯೇಕ ವಿಚಾರಣೆ ನಡೆಯಬೇಕು, 4 ವಾರಗಳಲ್ಲಿ ವಿಚಾರಣೆ ಪ್ರಾರಂಭವಾಗಿ 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರಿಂ ಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಜೋಶಿ ಸೇರಿದಂತೆ ಇತರೆ 10 ಮಂದಿ ನಾಯಕರ ವಿರುದ್ಧದ ಕ್ರಿಮಿನಲ್ ಆರೋಪದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕರಸೇವಕರೊಂದಿಗೆ 13 ಮಂದಿ ಬಿಜೆಪಿ ನಾಯಕರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಅಂತೆಯೇ ದಶಕಗಳ ಹಿಂದಿನ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಇನ್ನೆರಡು ವರ್ಷದಲ್ಲಿ ವಿಚಾರಣೆ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದೆ. ಅಷ್ಟು ಮಾತ್ರವಲ್ಲದೇ ಲಖನೌ ಮತ್ತು ರಾಯ್ ಬರೇಲಿಯಲ್ಲಿ ನಡೆಯುತ್ತಿರುವ ವಿಚಾರಣೆ ಮುಂದುವರೆಯಲಿದ್ದು, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ. ಇದೇ ವೇಳೆ ಇನ್ನು ನಾಲ್ಕು ವಾರಗಳಲ್ಲಿ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಬೇಕು ಎಂದೂ ಸೂಚಿಸಿದೆ.
ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪಿನಾಕಿ ಚಂದ್ರ ಘೋಷ್ ಮತ್ತು ಆರ್. ಎಫ್. ನಾರಿಮನ್ ಅವರ ಪೀಠ, ವಿಚಾರಣೆ ಆರಂಭವಾದ ಬಳಿಕ ಯಾವುದೇ ಕಾರಣಕ್ಕೂ ನ್ಯಾಯಾಧೀಶರ ವರ್ಗಾವಣೆ ಮಾಡಬಾರದು ಎಂದೂ ಆದೇಶಿಸಿದೆ. ಅಂತೆಯೇ ಸಿಬಿಐ ಅಧಿಕಾರಿಗಳ ಪ್ರಕರಣ ಸಂಬಂಧ ಲಖನೌ ಕೋರ್ಟ್ ಗೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ನಿರ್ದೇಶನ ನೀಡಲಾಗಿದೆ.
ಈ ಹಿಂದೆ ಇದೇ ಪ್ರಕರಣ ಸಂಬಂಧ ಎಲ್ ಕೆ ಅಡ್ವಾಣಿ ಸೇರಿದಂತೆ ಇತರೆ 12ಕ್ಕೂ ಹೆಚ್ಚು ಮುಖಂಡರ ವಿರುದ್ಧ ಸಿಬಿಐ ದಾಖಲಿಸಿದ್ದ ಷಡ್ಯಂತ್ರ ಆರೋಪವನ್ನು ಅಲಹಾಬಾದ್ ನ್ಯಾಯಾಲಯ ಕೈಬಿಟ್ಟಿತ್ತು. ಹೀಗಾಗಿ ಅಲಹಾಬಾದ್ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಪ್ರಶ್ನಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ, ವಿನಯ್ ಕಟಿಯಾರ್ ಮತ್ತು ಕಲ್ಯಾಣ್ ಸಿಂಗ್ ಸೇರಿದಂತೆ ಹತ್ತಕ್ಕೂ ಅಧಿಕ ಮುಖಂಡರ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸಾಧ್ಯವಿಲ್ಲ ಎಂದಿತ್ತು.