ವಿಕಾಸ್ ಬರಾಲಾ - ವರ್ನಿಕಾ ಕುಂದು
ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳ ವಿರುದ್ಧ ಮಹಿಳೆ ಅಪಹರಣ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ವಾರ ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಂಡೀಗಢ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದ 23 ವರ್ಷದ ವಿಕಾಸ್ ಹಾಗೂ ಆಶೀಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೀವ್ರ ವಿಚಾರಣೆಯ ಬಳಿಕ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಚಂಡೀಗಢ ಪೊಲೀಸ್ ಮಹಾ ನಿರ್ದೇಶಕ ತೆಜೇಂದರ್ ಸಿಂಗ್ ಲುಥ್ರಾ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆಯಷ್ಟೆ ಪ್ರಕರಣ ಸಂಬಂಧ ಆರೋಪಿಗಳು ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದು, ಈ ರೀತಿ ತನಿಖೆಗೆ ಸಹಕಾರ ನೀಡದಿದ್ದರೆ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ ಎಂದು ತೆಜೇಂದರ್ ಸಿಂಗ್ ಅವರು ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಈಗ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ತನಿಖೆಗೆ ಬಹಳ ಸಮಯ ತೆಗೆದುಕೊಳ್ಳುವುದಿಲ್ಲ. ಸತ್ಯವನ್ನು ಬಯಲಿಗೆಳೆಯಲಾಗುತ್ತದೆ. ಈಗಾಗಲೇ ನಾವು 6 ವಿವಿಧ ಪ್ರದೇಶಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡಿದ್ದೇವೆ. ದೃಶ್ಯಾವಳಿಗಳಲ್ಲಿ ಆರೋಪಿಗಳು ಯುವತಿಯನ್ನು ಹಿಂಬಾಲಿಸಿರುವುದು ಸ್ಪಷ್ಟವಾಗಿದೆ. ಪ್ರಕರಣ ಸಂಬಂಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿವೆ. ಮತ್ತಷ್ಟು ಸಾಕ್ಷ್ಯಾಧಾರಗಳು ದೊರಕಿದರೆ ಉತ್ತಮವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಒಂದು ವೇಳೆ ಆರೋಪಿಗಳ ವಿರುದ್ಧದ ಅಪಹರಣ ಯತ್ನ ಆರೋಪ ಸಾಬೀತಾದರೆ ವಿಕಾಸ್ ಬರಾಲಾ ಹಾಗೂ ಆಶೀಶ್ ಗೆ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos