ನವದೆಹಲಿ: ಲೋಕಸಭೆಯ ಕಲಾಪದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿದ್ದು, ಭಾರತ ಬಿಟ್ಟು ತೊಲಗಿ ಚಳುವಳಿಯನ್ನು ಕೆಲವರು ವಿರೋಧಿಸಿದ್ದರು ಎಂದು ಹೇಳಿದ್ದಾರೆ.
ಬಿಜೆಪಿ ಹೆಸರನ್ನು ಪ್ರಸ್ತಾಪಿಸದೇ ಟಿಕಾಪ್ರಹಾರ ಮಾಡಿರುವ ಸೋನಿಯಾ ಗಾಂಧಿ, 1942 ರಲ್ಲಿ ಮಹಾತ್ಮಾ ಗಾಂಧಿ ಅವರು ಪ್ರಾರಂಭಿಸಿದ್ದ ಕ್ವಿಟ್ ಇಂಡಿಯಾ ಚಳುವಳಿಗೆ ಕಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದವು ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿ ಅವರು ಪ್ರಾರಂಭಿಸಿದ್ದ ಕ್ವಿಟ್ ಇಂಡಿಯಾ ಚಳುವಳಿಗೆ ಕೆಲವು ಸಂಘಟನೆಗಳಿಂದ ವಿರೋಧ ಇತ್ತು ಎಂಬುದನ್ನು ನಾವು ಮರೆಯಬಾರದು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಂತಹ ಸಂಘಟನೆಗಳ ಯಾವುದೇ ಪಾತ್ರ ಇರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಂಡಿತ್ ನೆಹರು ಹಲವು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದರು. ಕಾಂಗ್ರೆಸ್ ನ ಅನೇಕ ಕಾರ್ಯಕರ್ತರು ಬಲಿದಾನ ಮಾಡಿದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಯಾರೂ ಸಹ ಹಿಂಜರಿದಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಕ್ವಿಟ್ ಇಂಡಿಯಾ ಚಳುವಳಿಗೆ ವೀರ್ ಸಾವರ್ಕರ್ ವಿರೋಧಿಸಿದ್ದರು ಎಂದು ಸೋನಿಯಾ ಗಾಂಧಿ ಅವರ ಭಾಷಣಕ್ಕೂ ಮುನ್ನ ಕಾಂಗ್ರೆಸ್ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ ಆರೋಪಿಸಲಾಗಿತ್ತು.