ನವದೆಹಲಿ: ಸತತ 10 ವರ್ಷಗಳ ಕಾಲ ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು, ದೇಶದಲ್ಲಿ ಅಸಹಿಷ್ಣುತೆ, ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಸ್ಲಿಮರಲ್ಲಿ ಅಭದ್ರತೆಯ ಭಾವ ಮೂಡಿಸಿದೆ ಎಂದು ಹೇಳಿದ್ದಾರೆ.
ಭಾರತೀಯ ಮೌಲ್ಯಗಳು ಕುಸಿಯುತ್ತಿದ್ದು, ಕಾನೂನಾತ್ಮಕವಾಗಿ ಅಧಿಕಾರಿಗಳು ಏನನ್ನು ಮಾಡಬೇಕೋ ಅದನ್ನು ಮಾಡಲು ಸಾಧ್ಯವಾಗದ ರೀತಿಯಲ್ಲಿ ಅಧಿಕಾರಿಗಳ ಸಾಮರ್ಥ್ಯವೂ ಕೂಡ ಕುಸಿಯುತ್ತಿದೆ ಎಂದು ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ.
ದೇಶದ ನಾಗರಿಕನ ರಾಷ್ಟ್ರೀಯತೆಯ(ಭಾರತೀಯತೆ)ಯನ್ನು ಪ್ರಶ್ನಿಸಲಾಗುತ್ತಿರುವುದು ಆತಂಕಕಾರಿ ಚಿಂತನೆಯಾಗಿದೆ ಎಂದು ರಾಜ್ಯಸಭಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಹಮೀದ್ ಅನ್ಸಾರಿ ಹೇಳಿದ್ದಾರೆ. ಭಾರತದಲ್ಲಿ ಆಫ್ರಿಕನ್ನರ ಮೇಲೆ ನಡೆಯುತ್ತಿರುವ ದಾಳಿ, ಪ್ರಣಬ್ ಮುಖರ್ಜಿ ಹಾಗೂ ಪ್ರತಿಭಾ ಪಾಟೀಲ್, ಮನಮೋಹನ್ ಸಿಂಗ್ ಹಾಗೂ ನರೇಂದ್ರ ಮೋದಿ ಅವರೊಂದಿಗೆ ಕೆಲಸ ಸೇರಿದಂತೆ ಹಮೀದ್ ಅನ್ಸಾರಿಯವರು ಸಂದರ್ಶನದಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಭಾಷಣ ಮಾಡಿದ್ದ ಹಮೀದ್ ಅನ್ಸಾರಿ, ರಾಷ್ಟ್ರೀಯತೆಯನ್ನು ಅಸಹಿಷ್ಣುತೆ, ಅಹಂಕಾರದಿಂದ ಆಚರಿಸಲಾಗುತ್ತಿದೆ ಎಂದಿದ್ದರು. ಇದರ ಪರಿಣಾಮವಾಗಿ ಮುಸ್ಲಿಂ ಸಮುದಾಯದಲ್ಲಿ ಅಭದ್ರತೆಯ ಭಾವನೆ ಮೂಡುತ್ತಿದೆಯೇ ಎಂಬ ಬಗ್ಗೆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಹಮೀದ್ ಅನ್ಸಾರಿ ದೇಶದಲ್ಲಿ ಅಸಹಿಷ್ಣುತೆ, ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಸ್ಲಿಮರಲ್ಲಿ ಅಭದ್ರತೆಯ ಭಾವ ಮೂಡಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos