ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್
ಮಹಾರಾಜಗಂಜ್: ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಕಠಿಣ ಕ್ರಮ ಕೈಗೊಂಡಿದ್ದು, 11 ಅಧಿಕಾರಿಗಳಿಗೆ ಅಮಾನತು ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ 11 ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, 7 ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸೂಚಿಸಿದ್ದಾರೆಂದು ಉತ್ತರಪ್ರದೇಶ ರಾಜ್ಯ ಸರ್ಕಾರದ ವಕ್ತಾರ ಮಾಹಿತಿ ನೀಡಿದ್ದಾರೆ.
ಪುರಾಂದರ್ಪುರ್ ಮತ್ತು ಫರೆಂದ ಪೊಲೀಸ್ ಠಾಣಾಧಿಕಾರಿಗಳು ಸೇರಿದಂತೆ ನೈತಂತ್ವದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗಳ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಸಿಎಂ ಯೋಗಿ ಆದಿತ್ಯನಾಥ್ ಅವರು ಸಭೆಯೊಂದನ್ನು ನಡೆಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಸಭೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಕುರಿತಂತೆ ಅಧಿಕಾರಗಳ ಪ್ರತಿಕ್ರಿಯೆಗಳನ್ನು ಕೇಳಿದ್ದರು. ಸಭೆಯಲ್ಲಿ ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಅವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಕೊಡದೆ ಇರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದರು.
ಆಸ್ಪತ್ರೆಗಳಲ್ಲಿ ವೈದ್ಯರು ದೀರ್ಘಕಾಲಿಕ ಗೈರು ಹಾಜರಾಗುತ್ತಿರುವ ವಿಚಾರ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಯೋಗಿ ಆದಿತ್ಯನಾಥ್, ವೈದ್ಯರ ವಿರುದ್ದ ದಾಖಲಾಗಿರುವ ದೂರುಗಳು ಸತ್ಯವೆಂದು ತಿಳಿದುಬಂದಿದ್ದೇ ಆದರೆ, ವೈದ್ಯರು ನಾಲ್ಕು ತಿಂಗಳ ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದಿದ್ದರು.
ಸಾರ್ವಜನಿಕರ ಸಮಸ್ಯೆಗಳ ಕುರಿತಂತೆ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲು ಅಸಾಧ್ಯವಾದದ್ದು. ಎಚ್ಚರಿಕೆಗಳ ನಡುವೆಯೂ ಯಾರು ತಮ್ಮ ನಡವಳಿಕೆಗಳನ್ನು ಸರಿಪಡಿಸಿಕೊಳ್ಳುವುದಿಲ್ಲವೋ, ಯಾರು ತಮ್ಮ ಭ್ರಷ್ಟಾಚಾರಗಳನ್ನು ಮುಂದುವರೆಸುತ್ತಾರೆಯೋ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos