ಹೈದರಾಬಾದ್: ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕೂಡಲೇ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಸೂಚನೆ ನೀಡಿದೆ.
ಉಪಚನಾವಣಾ ಪ್ರಚಾರದ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಸಾರ್ವಜನಿಕವಾಗಿ ಶೂಟ್ ಮಾಡಿ, ನೇಣು ಹಾಕಬೇಕೆಂದು ಜಗನ್ ಮೋಹನ್ ಅವರು ಹೇಳಿದ್ದರು. ಜಗನ್ ಮೋಹನ್ ಅವರ ಈ ಹೇಳಿಕೆ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು.
ಈ ಹಿನ್ನಲೆಯಲ್ಲಿ ಜಗನ್ ಮೋಹನ್ ರೆಡ್ಡಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಜಗನ್ ಮೋಹನ್ ಅವರು ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಜಗನ್ ಅವರು ನೀಡಿರುವ ಹೇಳಿಕೆಯು ಒಬ್ಬ ನಾಯಕನ ಸಾರ್ವಜನಿಕ ಜೀವನಕ್ಕೆ ಸಂಬಂಧಿಸಿದ್ದಾಗಿದೆ. ನಿಂದನಾತ್ಮಕ ಹಾಗೂ ಪ್ರಚೋದನಾಕಾರಿ ಭಾಷಣೆ ಬಳಕೆಯು ಜನರಲ್ಲಿ ಗಲಭೆಯನ್ನು ಸೃಷ್ಯಿಸುತ್ತದೆ. ಜಗನ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದಂತಾಗಿದೆ. ಹೀಗಾಗಿ ಕೂಡಲೇ ರಾಜ್ಯ ಆಯೋಗ ಜಗನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ ಎಂದು ತಿಳಿದುಬಂದಿದೆ.