ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ.
ಇಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆಯಿಂದ ಉಚ್ಚಾಟಿಸುವ ಸಂಬಂಧ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆಯಲು ನಿರ್ಧರಿಸಲಾಗಿದೆ. ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಭವಿಷ್ಯ ನಿರ್ಧಾರವಾಗಲಿದೆ.
ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮಾಡಿದ ಕೆಲವು ನೇಮಕಾತಿಗಳ ಮಾನ್ಯತೆ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಪಕ್ಷದ ಕೆಲವು ಶಾಸಕರು ಮತ್ತು ಸಂಸದರು ಸಭೆಗೆ ಗೈರು ಆಗಿದ್ದರು ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ.
ಜಯಲಲಿತಾ ನಿಧನದ ನಂತರ ಕಳೆದ ಡಿಸೆಂಬರ್ 29ರಂದು ನಡೆದ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಈ ಮಧ್ಯೆ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ 21 ಬಂಡಾಯ ಶಾಸಕರು ಮುಖ್ಯಮಂತ್ರಿ ಪಳನಿಸ್ವಾಮಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos