ತಿರುವನಂತಪುರಂ: ಸ್ವಾತಂತ್ರ್ಯೋತ್ಸವ ದಿನದಂದು ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರಧಾನಮಂತ್ರಿಗಳ ಕಚೇರಿ ಮಂಗಳವಾರ ಕೇರಳ ಸರ್ಕಾರಕ್ಕೆ ಸೂಚಿಸಿದೆ.
ಕರ್ನಾಕ್ಕಿಯಮ್ಮನ್ ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮೋಹನ್ ಭಾಗವತ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಮಿಸ್ಟರ್ ಭಾಗವತ್ ಯಾವುದೇ ಕಾರಣಕ್ಕೂ ಧ್ವಜಾರೋಹಣ ನೆರವೇರಿಸಬಾರದು ಎಂದು ಪಾಲಕ್ಕಾಡ್ ಜಿಲ್ಲಾಧಿಕಾರಿ ಮೇರಿ ಕುಟ್ಟಿ ಅವರು ಶಾಲೆಗೆ ಲಿಖಿತ ಆದೇಶ ನೀಡಿದ್ದರು. ಶಾಲೆಯಲ್ಲಿ ಅಧಿಕಾರಿ ವರ್ಗದವರು ಅಥವಾ ಶಾಸಕರಂತಹ ಜನಪ್ರತಿನಿಧಿಗಳು ಮಾತ್ರ ಧ್ವಜಾರೋಹಣ ನೆರವೇರಿಸಬೇಕು. ಸಂಘಟನೆಗಳ ಮುಖ್ಯಸ್ಥರಿಗೆ ಇದಕ್ಕೆ ಅವಕಾಶ ಇಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದರು. ಆದರೆ ಭಾಗವತ್ ಅವರು ಜಿಲ್ಲಾಧಿಕಾರಿ ಆದೇಶ ದಿಕ್ಕರಿಸಿ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸಿದ್ದರು.
ಜಿಲ್ಲಾಧಿಕಾರಿಯ ಈ ನಡೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಇ ಕೃಷ್ಣದಾಸ್ ಅವರು ಈ ಸಂಬಂಧ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ಇಂದು ಕೇರಳ ಸರ್ಕಾರದಿಂದ ಸ್ಪಷ್ಟನೆ ಕೇಳಿದೆ.
ಜಿಲ್ಲಾಧಿಕಾರಿಗಳು ಮೋಹನ್ ಭಾಗವತ್ ಅವರ ಧ್ವಜಾರೋಹಣಕ್ಕೆ ನಿರ್ಬಂಧ ವಿಧಿಸುವ ಮೂಲಕ ನಾಗರಿಕರ ಸಂವಿಧಾನಾತ್ಮಕ ಹಕ್ಕನ್ನು ಉಲ್ಲಂಘಿಸಿದ್ದಾರೆ ಎಂದು ಕೃಷ್ಣದಾಸ್ ಅವರು ಪ್ರಧಾನಿ ಕಚೇರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos