ನವದೆಹಲಿ: ಜನಪ್ರತಿನಿಧಿಗಳ ಕ್ರಿಮಿನಲ್ ಅಪರಾಧಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ಜನಪ್ರತಿನಿಧಿ(ಸಂಸದರು, ಶಾಸಕರು)ಗಳಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷ ಕೋರ್ಟ್ ಸ್ಥಾಪನೆ ಮಾಡುವುದನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಮರ್ಥಿಸಿಕೊಂಡಿದೆ.
2014 ರಿಂದ ಈಗಾಗಲೇ ಜನಪ್ರತಿನಿಧಿಗಳ ವಿರುದ್ಧ 1,581 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳ ವಿಚಾರಣೆ ನಡೆಸಲು ಪ್ರಾರಂಭಿಕ ಹಂತದಲ್ಲಿ 12 ಕೋರ್ಟ್ ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸರ್ಕಾರದ ತೀರ್ಮಾನದ ಬಗ್ಗೆ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ನರೇಶ್ ಅಗರ್ವಾಲ್ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸಮಾಜಕ್ಕೆ ಮೇಲ್ಪಂಕ್ತಿ ಹಾಕಿಕೊಡುವಲ್ಲಿ ಜನಪ್ರತಿನಿಧಿಗಳು ಮುಂದಿರಬೇಕು ಎಂದು ಹೇಳಿದ್ದಾರೆ.
ನಾವು ಜನಪ್ರತಿನಿಧಿಗಳು, ನಮ್ಮ ವಿರುದ್ಧದ ಆರೋಪದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿವೆ ಎಂದು ಆರೊಪಿಸಬಹುದು, ನಮ್ಮ ವಿರುದ್ಧ ಆರೋಪ ಕೇಳಿಬಂದಾಗ ತ್ವರಿತ ವಿಚಾರಣೆ ನಡೆಯಬೇಕು ಎಂದು ಜೇಟ್ಲಿ ವಿಶೇಷ ನ್ಯಾಯಾಲಯಗಳ ಸ್ಥಾಪನೆಯನ್ನು ಸಮರ್ಥಿಸಿಕೊಂಡಿದ್ದಾರೆ.