ನವದೆಹಲಿ: ಕಳೆದ ಸೆಪ್ಟೆಂಬರ್ ನಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಹತ್ಯೆಗೈದಿದ್ದ ಭಾರತೀಯ ಸೇನೆ ಇದೀಗ ಮತ್ತೊಮ್ಮೆ ಪಾಕ್ ಗಡಿಯೊಳಗೆ ನುಗ್ಗಿ ಪಾಕಿಸ್ತಾನಿ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿ ವಾಪಸ್ ಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನಿ ಸೈನಿಕರು ಭಾರತೀಯ ಪೋಸ್ಚ್ ಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಪಾಕಿಸ್ತಾನಿ ಸ್ನೈಪರ್ ಗಳ ಗುಂಡಿನ ದಾಳಿ ಭಾರತದ ಯೋಧ ಪರ್ಗತ್ ಸಿಂಗ್ ಮೃತರಾಗಿದ್ದರು. ಈ ವಿಚಾರ ಭಾರತದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಎಂಬ ಒತ್ತಡ ಕೇಳಿಬರುತ್ತಿದ್ದಂತೆಯೇ ಅತ್ತ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಮೂವರು ಪಾಕಿಸ್ತಾನಿ ಸೈನಿಕರನ್ನು ಕೊಂದು ವಾಪಸ್ ಬಂದಿದೆ ಎಂದು ತಿಳಿದುಬಂದಿದೆ.
ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವಂತೆ ಇಂಡೋ-ಪಾಕ್ ಗಡಿ ನಿಯಂತ್ರಣ ರೇಖೆಯ ರಾಖಿಕ್ರಿ, ರಾವಲ್ ಕೋಟ್ ಸೆಕ್ಟರ್ ನಲ್ಲಿ ಪಾಕಿಸ್ತಾನಿ ಸೇನಾ ಕ್ಯಾಂಪ್ ಗಳ ಮೇಲೆ ಭಾರತೀಯ ಪಡೆಗಳು ದಾಳಿ ಮಾಡಿದ್ದು ಈ ವೇಳೆ ಮೂವರು ಪಾಕಿಸ್ತಾನಿ ಯೋಧರನ್ನು ಸದೆ ಬಡಿದಿದೆ. ಅಂತೆಯೇ ಈ ಘಟನೆಯಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಭಾರತೀಯ ಸೇನೆಯ ಈ ಕಾರ್ಯಾಚರಣೆ ಸೇನೆ 2016ರ ಸೆಪ್ಟೆಂಬರ್ ನಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ನೆನಪಿಸುವಂತೆ ಇದೆ.
ಅಂದೂ ಕೂಡ ಉರಿ ಸೆಕ್ಟರ್ ಮೇಲೆ ಉಗ್ರರು ದಾಳಿ ಮಾಡಿ ಹಲವು ಭಾರತೀಯ ಯೋಧರನ್ನು ಕೊಂದು ಹಾಕಿದ್ದರು. ಇದರ ಬೆನ್ನಲ್ಲೇ ರಹಸ್ಯ ಕಾರ್ಯಾಚರಣೆ ಕೈಗೊಂಡಿದ್ದ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿ ಬೀಡು ಬಿಟ್ಟಿದ್ದ ಹತ್ತಾರು ಉಗ್ರ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ್ದಲ್ಲದೇ 40ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿದಿತ್ತು, ಇದೀಗ ಅಂತಹುದೇ ಮತ್ತೊಂದು ಕಾರ್ಯಾಚರಣೆಯನ್ನು ಸೇನೆ ನಡೆಸಿದ್ದು, ಈ ಬಾರಿ ನೇರವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಪಾಕಿಸ್ತಾನಿ ಸೈನಿಕರನ್ನೇ ಮಟ್ಟ ಹಾಕಿ ವಾಪಸ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟಾರೆ ಸೇನೆಯ ಈ ಕಾರ್ಯಾಚರಣೆ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಆದರೆ ಈ ಬಗ್ಗೆ ಭಾರತೀಯ ಸೇನಾಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos