ಇಂಫಾಲ: ಫೆ.25 ರಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮಣಿಪುರದ ಪಶ್ಚಿಮ ಇಂಫಾಲ ಜಿಲ್ಲೆಯಲ್ಲಿ ಬಾಂಬ್ ಮತ್ತು ಗ್ರೆನೇಡ್ ಪತ್ತೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಆಗಮಿಸುತ್ತಿರುವುದನ್ನು ವಿರೋಧಿಸಿ 6 ಬಂಡಾಯ ಗುಂಪುಗಳು ಮಣಿಪುರ ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ಮಣಿಪುರದಲ್ಲಿ ಬಾಂಬ್ ಹಾಗೂ ಗ್ರೆನೇಡ್ ಪತ್ತೆಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ವಿರೋಧಿಸಿರುವ ಬಂಡಾಯ ಸಂಘಟನೆಗಳು ಮಣಿಪುರದ ಜನರನ್ನು ದಾರಿ ತಪ್ಪಿಸಲು ಉದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಫಾಲಕ್ಕೆ ಭೇಟಿ ನೀಡುತ್ತಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾ.4 ಹಾಗೂ ಮಾ.8 ರಂದು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ಕೈಗೊಳ್ಳಲಾಗಿದೆ.